ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಖಾಸಗಿ ಹೋಟೆಲ್ ನಲ್ಲಿಂದು ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಜೊತೆ 5 ಕೆ.ಜಿ. ಸಿರಿಧಾನ್ಯ. ಯುಗಾದಿ, ದೀಪಾವಳಿ, ಗಣೇಶ ಹಬ್ಬ ಸೇರಿ ವರ್ಷಕ್ಕೆ 3 ಗ್ಯಾಸ್ ಸಿಲಿಂಡರ್ ಉಚಿತ ನೀಡುವ ಮಹತ್ವದ ಘೋಷಣೆ ಮಾಡಿದ್ದಾರೆ.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು. ನಂತರ ಪ್ರಣಾಳಿಕೆ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ಜನರ ಹಿತದೃಷ್ಟಿಯಿಮದ ಪ್ರಣಾಳಿಕೆ ತಯಾರಿಸಿದ್ದೇವೆ. ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಅರ್ಧಲೀಟರ್ ನಂದಿನಿ ಹಾಲು ಕೊಡುತ್ತೇವೆ. ಬಡವರ ಕಲ್ಯಾಣಕ್ಕೆ ನಾವು ಮಹತ್ವ ನೀಡಿದ್ದೇವೆ. ಆಯುಷ್ಮಾನ್ ಕಾರ್ಡ್ ಫಲಾನುಭವಿಗಳ ಚಿಕಿತ್ಸಾ ವೆಚ್ಚವನ್ನು 10 ಲಕ್ಷ ರೂ.ಗೆ ಏರಿಕೆ ಮಾಡಲಾಗುವುದು. ಅಕ್ಕಿ, 5 ಕೆಜಿ ಸಿರಿಧಾನ್ಯ ನೀಡಲಾಗುವುದು ಎಂದು ಹೇಳಿದ್ದಾರೆ.



