ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3 ಸಾವಿರ ಲೈನ್ ಮ್ಯಾನ್ (line man) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪಿಲ್ ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಈಗಾಗಲೇ 2.5 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಿ ಮೂಲ ಸೌರ್ಯ ಒದಗಿಸಿದೆ. ಉಳಿದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಹೊಸದಾಗಿ ಬಂದ ಅಕ್ರಮ-ಸಕ್ರಮ ಅರ್ಜಿಗಳ ಕುರಿತು ನಂತರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಕಳೆದ ವರ್ಷ ತೀವ್ರ ಬರಗಾಲವಿದ್ದುದರಿಂದ ವಿದ್ಯುತ್ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗಿದೆ. ಪ್ರಸ್ತಕ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್ ಸೆಟ್ ಒದಗಿಸುವ ಕುಸುಮ್-ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಸಬ್ಸಿಡಿಯನ್ನು ಶೇ. 50ಕ್ಕೆ ಹೆಚ್ಚಿಸಿದ್ದು, ಕೇಂದ್ರ ಸರ್ಕಾರ ಶೇ. 30ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಕೇವಲ ಶೇ.20 ಮಾತ್ರ ಹಣ ಪಾವತಿಸಿ ಸೋಲಾರ್ ಪಂಪ್ ಸೆಟ್ ಪಡೆಯಬಹುದು. ಈ ಯೋಜನ ರೈತರಿಗೆ ವರದಾನವಾಗಲಿದೆ ಎಂದು ಹೇಳಿದರು.