ಬೆಂಗಳೂರು: ಇನ್ಮುಂದೆ ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಿದ ವೈದ್ಯರಿಗೆ ಗ್ರಾಮೀಣ ಭಾಗದಲ್ಲಿ ಕಡ್ಡಾಯ ಸೇವೆಯಿಂದ ವಿನಾಯಿತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ ಎಚ್ ಕೆ ಪಾಟೀಲ್, ಗ್ರಾಮದಲ್ಲಿ ಖಾಲಿ ಹುದ್ದೆಗೆ ಅನುಗುಣವಾಗಿ ಸೇವೆಗೆ ಸರ್ಕಾರ ನಿಯೋಜನೆ ಮಾಡಲಾಗುವುದು. ರಾಜ್ಯದಲ್ಲಿ ವೈದ್ಯರ ಕೊರತೆ ಇಲ್ಲದಿರುವ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಎಂಬಿಬಿಎಸ್ ಪದವೀಧರರಿಗೆ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದವರಿಗೂ ಈ ನಿಯಮ ಅನ್ವಯಿಸುತ್ತದೆ ಎಂದರು.
ಅಗತ್ಯವಿದ್ದರೆ ಹೆಚ್ಚಿನ ವೈದ್ಯರನ್ನು ಕೂಡ ನೇಮಕ ಮಾಡಿಕೊಳ್ಳಲಾಗುತ್ತದೆ. ಅವಶ್ಯಕತೆಗಳಿಗೆ ಅನುಗುಣವಾಗಿ ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ಒಂದು ಗ್ರಾಮಕ್ಕೆ ಮೂವರು ವೈದ್ಯರನ್ನು ಕಳುಹಿಸಿದರೆ ಮಾನವ ಸಂಪನ್ಮೂಲ ಅನಗತ್ಯವಾಗಿ ವ್ಯರ್ಥವಾಗುತ್ತದೆ. ಈ ನಿರ್ಧಾರದಿಂದ ಗ್ರಾಮೀಣ ಭಾಗದ ವೈದ್ಯರ ನೇಮಕಾತಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇಲ್ಲ, ಖಾಲಿ ಇದ್ದರೆ ತಕ್ಷಣ ಭರ್ತಿ ಮಾಡಲಾಗುವುದು ಎಂದರು, ಕಡ್ಡಾಯ ಗ್ರಾಮೀಣ ಸೇವೆಯಡಿ ವೈದ್ಯರಿಗೆ ಮಾಸಿಕ ಸುಮಾರು 60 ಸಾವಿರದಿಂದ 70 ಸಾವಿರ ವೇತನ ನೀಡಲಾಗುತ್ತಿತ್ತು. ಕಡ್ಡಾಯ ಗ್ರಾಮೀಣ ಸೇವಾ ನಿಯಮವನ್ನು ಸಡಿಲಿಸುವ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ಹೊರೆ ಕಡಿಮೆಯಾಗುವ ನಿರೀಕ್ಷೆ ಇದೆ. ಈ ನಿರ್ಧಾರದ ಹಿಂದೆ ಯಾವುದೇ ಲಾಬಿ ಇಲ್ಲ ಎಂದು ತಿಳಿಸಿದರು.



