ಬೆಂಗಳೂರು: ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ ಪಡೆದಿದ್ದು, ಇದೀಗ ಇಡೀ ರಾಜ್ಯದಲ್ಲಿ ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ 24 ಗಂಟೆ ಅವಧಿಯಲ್ಲಿ ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದೆ. 6ರಿಂದ 11 ಸೆಂಟಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 13 ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.
ಕರ್ನಾಟಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಜೂನ್ 09ರಿಂದ ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಕರ್ನಾಟಕದ ಚಿಕ್ಕಬಳ್ಳಾಪುರ, ತುಮಕೂರು, ಕೋಲಾರದಲ್ಲಿ ಮೂರು ದಿನ ಧಾರಾಕಾರ ಮಳೆ ಆಗಲಿದೆ. ಮೈಸೂರು, ರಾಮನಗರ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ವ್ಯಾಪಕ ಮಳೆ ಆಗಲಿದೆ.



