ಬಳ್ಳಾರಿ: ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹಕ್ಕೆ ಮಹತ್ವದ ಬದಲಾವಣೆಯಾಗಲಿದ್ದು, ಶೀಘ್ರದಲ್ಲಿ ರಾಜ್ಯದಾದ್ಯಂತ ಏಕರೂಪ ತೆರಿಗೆಯ ಜಿಯೋ ಟ್ಯಾಗ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ತೆರಿಗೆ ವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, ರಾಜ್ಯದಾದ್ಯಂತ ಏಕರೀತಿಯ ಕರವಸೂಲಾತಿಗೆ ಜಿಯೋ ಟ್ಯಾಗ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದರು.
ರಾಜ್ಯದ ಬಹುತೇಕ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನಿರ್ಮಾಣಗೊಂಡಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ ಹಾಗೂ ಇನ್ನೂ ಕೆಲವು ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಾದ ಭಾರೀ ಪ್ರಮಾಣದ ತೆರಿಗೆ ವಸೂಲಾಗದೇ ಬಾಕಿ ಉಳಿಯುತ್ತಿರುವುದನ್ನು ಸರ್ಕಾರವು ವಸೂಲಿಗೆ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.



