ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ವಾರಗಳಿಂದ ನಿರಂತರವಾಗಿ ಸುರಿಯುತ್ತಿದೆ. ಈ ಮಳೆ ಮುಂದಿನ ಐದು ದಿನ ಮತ್ತಷ್ಟು ತೀವ್ರಗೊಳ್ಳಲಿದೆ. ಉಳಿದಂತೆ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಭಾರೀ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳು, ಮಲೆನಾಡಿನ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಿಲ್ಲಿ ಅತ್ಯಧಿಕ ಮಳೆಯಾಗಲಿದೆ. ಜಲೈ 17 ರಿಂದ ಮುಂದಿನ ಐದು ದಿನಗಳು ರಾಜ್ಯದ ಹಲವೆಡೆ ಮುಂಗಾರು ಚುರುಕಾಗಿರಲಿದೆ. ಮುಂದಿನ ನಾಲ್ಕು ದಿನ ಗುಡುಗು ಮಿಂಚು ಸಹಿತ ನಿರಂತರ ಧಾರಾಕಾರವಾಗಿ ಮಳೆ ಬರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಯೆಲ್ಲೋ ಅಲರ್ಟ್, ಐದನೇ ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೇರಿದಂತೆ ಕೆಲವು ಪ್ರದೇಶಗಳು, ಉಡುಪಿ, ಕುಂದಾಪುರ ಸೇರಿದಂತೆ ಸಮುದ್ರ ತೀರದ ಪ್ರದೇಶಗಳ ಜನರಲ್ಲಿ ವ್ಯಾಪಕ ಮಳೆಯಾಗಲಿದೆ.
ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಜುಲೈ 20 ಮತ್ತು ಜುಲೈ 22ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗದಲ್ಲಿ ಎರಡು ದಿನ ವ್ಯಾಪಕ ಮಳೆ ಬೀಳುವ ಸಂಭವವಿದೆ.
ಇಂದಿನಿಂದ (ಜು.17) ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆ, ಹಾಸನ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



