ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡಿನ ಜಿಲ್ಲೆಗಳ ವಿವಿಧ ಕಡೆ ಅಕಾಲಿಕ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ಮಳೆಯಾಗುತ್ತಿದ್ದು, 2 ದಿನ 6 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್ಎನ್ಡಿಎಂಸಿ) ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶವು ಹವಾಮಾನ ಪರಿಸ್ಥಿತಿಗಳಿಗೆ ಕಾರಣವಾಗಿದೆ ಎಂದು ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಬಿಸಿಲಿನ ಧಗೆಯಿಂದ ಸುಡುತ್ತಿದ್ದ ಭೂಮಿಗೆ ತಂಪೆರೆದಂತಾಗಿದೆ.ಆದರೆ , ಅಕಾಲಿಕ ಮಳೆಯಿಂದ ರೈತರಿಗೆ ಸಂಕಷ್ಟವಾಗಿದೆ.
ದಕ್ಷಿಣ ಕನ್ನಡದ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ಭಾರೀ ಮಳೆಯಾಗಿದ್ದರೆ, ಜಿಲ್ಲೆಯ ಇತರ ಭಾಗಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದೆ. ಮಂಗಳೂರಿನಲ್ಲಿ ಗುರುವಾರ ಗುಡುಗು ಸಹಿತ ಮಳೆಯಾಗಿದೆ. ಹಲವಾರು ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ.
ಕೋಟ, ಹೊನ್ನಾವರ, ಮಂಕಿ, ಮಂಗಳೂರು, ಕುಮಟಾ, ಉಡುಪಿ, ಕುಂದಾಪುರ, ಕಾರವಾರ, ಯಲ್ಲಾಪುರ,ಕಮ್ಮರಡಿ , ಹುಂಚದಕಟ್ಟೆ , ಬಾಳೆಹೊನ್ನೂರು, ಜಯಪುರ, ಪುತ್ತೂರು ಎಚ್ಎಂಎಸ್ , ಕಳಸ, ಕೊಡಗು, ಹಾಸನ ಜಿಲ್ಲೆಯಲ್ಲಿ ಮಳೆಯಾಗಿದೆ.
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಗೆಯೇ ಚಾಮರಾಜನಗರ, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲಲ್ಲಿ ವ್ಯಾಪಕ, ಹಗುರ, ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಉಳಿದ ಪ್ರದೇಶಗಳು ಮುಂದಿನ ಐದು ದಿನಗಳಲ್ಲಿ ಮೋಡ ಕವಿದ ವಾತಾವರಣವ ಹೊಂದಿರುವ ನಿರೀಕ್ಷೆಯನ್ನು ಕೆಎಸ್ಎನ್ಡಿಎಂಸಿ ವ್ಯಕ್ತಪಡಿಸಿದೆ.



