ಬೆಂಗಳೂರು: ರಾಜ್ಯದಲ್ಲಿ ಬಿರು ಗಾಳಿ ಸಹಿತ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದೆ. ಕರಾವಳಿ, ಮಲೆನಾಡು, ದಕ್ಷಿಣ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 19ರಿಂದ ಮಳೆ ಇನ್ನಷ್ಟು ಬಿರುಸಾಗುವ ಸಾಧ್ಯತೆ ಇದೆ.
ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡದಲ್ಲಿ ಮೇ 19ರಿಂದ ಎರಡು ದಿನ ಹಾಗೂ ಮಂಡ್ಯ, ತುಮಕೂರು, ಉಡುಪಿಯಲ್ಲಿ ಮೇ 20ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಬಳ್ಳಾರಿ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗದಲ್ಲಿ ಮುಂದಿನ ಎರಡು ದಿನ, ಉಡುಪಿ, ಉತ್ತರ ಕನ್ನಡದಲ್ಲಿ ಮೇ 19ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಕರ್ನಾಟಕ ಭಾಗದ ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಗದಗ, ರಾಯಚೂರು, ಕೋಲಾರ, ರಾಮನಗರ, ವಿಜಯನಗರ, ಬಾಗಲಕೋಟೆಯಲ್ಲಿ 40-50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ.ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು ಗರಿಷ್ಠ ತಾಪಮಾನದಲ್ಲಿ 2-4 ಡಿ. ಸೆ. ಇಳಿಮುಖವಾಗಲಿದೆ.



