ಬೆಂಗಳೂರು: ಜೂ.22ರಿಂದ ರಾಜ್ಯದಲ್ಲಿ ಆರಿದ್ರಾ ಮಳೆ ಪ್ರವೇಶ ಪಡೆಯಲಿದ್ದು, ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜೂ.24 ರಂದು ಭಾರೀ ಮಳೆಯಾಗುವ ಕಾರಣ ರೆಡ್ ಅಲರ್ಟ್ ನೀಡಲಾಗಿದೆ. ಮಲೆನಾಡಿನ ನಾಲ್ಕೂ ಜಿಲ್ಲೆಗಳಲ್ಲಿ ಭಾನುವಾರ ಹಾಗೂ ಸೋಮವಾರ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಕೊಡಲಾಗಿದೆ. ಇದೇ ಅವಧಿಯಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ. ಈ ಮಳೆ ಇಡೀ ರಾಜ್ಯವನ್ನು ಆವರಿಸಿಕೊಳ್ಳಲಿದೆ.
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ವಾರಾಂತ್ಯದಿಂದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಜುಲೈನಲ್ಲಿ ಒಳ್ಳೆಯ ವರ್ಷಧಾರೆ ನಿರೀಕ್ಷಿಸಬಹುದಾಗಿದೆ. ಆಗಸ್ಟ್ನಿಂದ ಮತ್ತೆ ಮಳೆ ಬಿರುಸುಗೊಳ್ಳಲಿದೆ. ಈ ವರ್ಷ ವಾಡಿಕೆ ಅಥವಾ ತುಸು ಹೆಚ್ಚಾಗಿಯೇ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ವರ್ಷದ ಜೂ. 1ರಿಂದ 19ರವರೆಗೆ ರಾಜ್ಯದಲ್ಲಿ ಸರಾಸರಿ ಶೇ.13ಕ್ಕಿಂತ ಹೆಚ್ಚು ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳು ವಾಡಿಕೆಗಿಂತ ಹೆಚ್ಚು ಮಳೆ ಕಂಡಿವೆ. ಆದರೆ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗಿನಲ್ಲಿ ಸರಾಸರಿ ಶೇ. -38 ಮಳೆ ಕೊರತೆ ಉಂಟಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿಯಲ್ಲೂ ಸರಾಸರಿ ಶೇ. -32ರಷ್ಟು ಕೊರತೆಯಾಗಿದೆ.



