ಬೆಂಗಳೂರು; ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಕರಾವಳಿ, ಮಲೆನಾಡು, ಒಳನಾಡಿನಲ್ಲಿ ಇನ್ನೂ ಮೂರ್ನಾಲ್ಕು ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.21ರವರೆಗೆ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಬಲವಾದ ಮೇಲೈ ಗಾಳಿಯೊಂದಿಗೆ ಅತ್ಯಧಿಕ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ ಹಾಗೂ ಹಾಸನ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿಯೂ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಜು.21ರವರೆಗೆ ಕರಾವಳಿ ಭಾಗದಲ್ಲಿ ಜೋರಾದ ಗಾಳಿ ಮತ್ತು ಮಳೆ ಮುಂದುವರೆಯಲಿದೆ. ಇಂದಿನಿಂದ ಜು.21ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ. ಹೀಗಾಗಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಒಳನಾಡಿನಲ್ಲಿ ಜುಲೈ 19ರಿಂದ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬೀ ಸಮುದ್ರದಲ್ಲಿ ಟ್ರಫ್ ಉಂಟಾಗಿರುವ ಪರಿಣಾಮ ಭಾರೀ ಮಳೆಯಾಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.ಮುಂಗಾರು ಹಂಗಾಮಿನ ನಿರಂತರ ಮಳೆಯಾಗುತ್ತಿರುವುದು ರೈತರಿಗೆ ಖುಷಿ ತಂದಿದೆ. ಮುಂಗಾರು ಬೆಳೆಗಳ ಬಿತ್ತನೆಗೆ ಸೂಕ್ತ ವಾತಾವರಣ ಸೃಷ್ಟಿಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕಾಗಿವೆ.