ಬೆಂಗಳೂರು: ನೇಮಕಾತಿ ನಿರೀಕ್ಷೆಯಲ್ಲಿದ್ದ 15 ಸಾವಿರ ಪದವೀಧರ ಶಿಕ್ಷಕರಿಗೆ ಹೈಕೋರ್ಟ್ ಶಾಕ್ ನೀಡಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಗೊಂದಲ ಹಿನ್ನೆಲೆ ತಾತ್ಕಾಲಿಕ ಅಯ್ಕೆ ಪಟ್ಟಿ ರದ್ದು ಮಾಡಿ ಹೈಕೊರ್ಟ್ ಆದೇಶ ಹೊರಡಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕರೆಯಲಾಗಿದ್ದ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ಬಳಿಕ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು.ಈ ಪಟ್ಟಿಯನ್ನು ಇದೀಗ ಕರ್ನಾಟಕ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು ರದ್ದುಗೊಳಿಸಿದೆ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಗೊಂದಲ ಹಿನ್ನೆಲೆ ನೂರಾರೂ ಅಭ್ಯರ್ಥಿಗಳು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.
ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರು ನ್ಯಾಯಾಲಯದ ಮುಂದೆ ವಾದಿಸಿ, ಪತಿಯ ಜಾತಿ, ಆದಾಯ ಪ್ರಮಾಣ ಪತ್ರವನ್ನು (ಪರಿಗಣಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಇದು ನಿಯಮ ಬಾಹಿರವಾಗಿದೆ. ಕಾನೂನು ಬಾಹಿರವಾಗಿರುವಂತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿದ್ದರು.
ತಂದೆಯ ಜಾತಿ, ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸುವಂತೆ ನ್ಯಾಯಪೀಠಕ್ಕೆ ಸೂಚಿಸುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಪ್ರಕಟಿಸಿದ್ದಂತ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿದೆ.



