ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಗಳು ಬೆಳಕಿಗೆ ಬಂದ ಕಾರಣ, ಎರಡು ರಾಷ್ಟ್ರೀಕೃತ ಬ್ಯಾಂಕ್ಗಳ ಸರ್ಕಾರಿ ಖಾತೆಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಮಾಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್ಗಳ ಎಲ್ಲ ಶಾಖೆಗಳಲ್ಲಿರುವ ಸರ್ಕಾರಿ ಖಾತೆಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ. ಸರ್ಕಾರಕ್ಕೆ ಸಂಬಂಧಿಸಿ ಈ ಬ್ಯಾಂಕ್ಗಳ ಎಲ್ಲಾ ಶಾಖೆಗಳಿಂದ ಠೇವಣಿ ಹಿಂಪಡೆಯಬೇಕು. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮ ಮಂಡಳಿ, ಸ್ಥಳೀಯ ಸಂಸ್ಥೆ, ವಿವಿ ಮತ್ತಿತರ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ.
ಎಲ್ಲಾ ರೀತಿಯ ಠೇವಣಿ, ಹೂಡಿಕೆ ತಕ್ಷಣ ಹಿಂಪಡೆಯಬೇಕು. ಇಷ್ಟೇ ಅಲ್ಲದೆ, ಇನ್ನು ಮುಂದೆ ಈ ಬ್ಯಾಂಕ್ಗಳಲ್ಲಿ ಹೂಡಿಕೆ ಮಾಡಬಾರದು ಎಂದು ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ. ಪಿಸಿ ಜಾಫರ್ ಮಹತ್ವದ ಆದೇಶ ಹೊರಡಿಸಿದ್ದಾರೆ. ಇಲಾಖೆಗಳ ಖಾತೆ ಸ್ಥಗಿತಗೊಳಿಸಿ ಆ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 20ರೊಳಗೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಜಾಫರ್ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ರಾಷ್ಟ್ರೀಕರತ ಬ್ಯಾಂಕ್ನಿಂದಲೇ ಹಣ ಅಕ್ರಮ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣ ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಬಹಳಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಿದೆ.



