ಬೆಂಗಳೂರು: ರೈತರ ತೀವ್ರ ವಿರೋಧ ನಂತರ ಎಚ್ಚೆತ್ತ ಸರ್ಕಾರ, ವಿಜಯಪುರ ಸೇರಿ ವಿವಿಧ ಜಿಲ್ಲೆಯ ರೈತರ ಜಮೀನಿಗೆ ವಕ್ಫ್ ಬೋರ್ಡ್ ನೀಡಿದ್ದ ನೋಟಿಸ್ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರ ಯಾವುದೇ ನೋಟಿಸ್ ನೀಡಿಲ್ಲ, ಪ್ರತಿಪಕ್ಷ ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಸರ್ಕಾರ ಆರೋಪಿಸಿತ್ತು. ಇದರಿಂದ ಕೆರಳಿದ ರೈತರು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಯಾವಾಗ ಪ್ರತಿರೋಧ ಜೋರಾಯ್ತು, ಸರ್ಕಾರ ನೋಟಿಸ್ ವಾಪಸ್ ಪಡೆಯುವುದಾಗಿ ಹೇಳಿದೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಜಯಪುರದ ಹುನವಾಡ ಗ್ರಾಮದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ಹಿಂಪಡೆಯುತ್ತೇವೆ.ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಯಾವುದೇ ರೈತರನ್ನು ಸರ್ಕಾರ ಒಕ್ಕಲೆಬ್ಬಿಸುವುದಿಲ್ಲ. ಈಗಾಗಲೇ ಮೂವರು ಸಚಿವರು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ವಿಜಯಪುರದಲ್ಲಿ ಯಾವುದೇ ರೈತರಿಗೆ ನೋಟಿಸ್ ಕೊಟ್ಟಿದ್ದರೆ ಅದನ್ನು ಹಿಂಪಡೆಯಲಾಗುವುದು. ಯಾದಗಿರಿ ಹಾಗೂ ಧರವಾಡ ಜಿಲ್ಲೆಗಳಲ್ಲಿಯೂ ರೈತರ ಜಮೀನಿಗೆ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ವಿಚಾರವಾಗಿ, ಈ ಬಗ್ಗೆ ಪರಿಶೀಲಿಸಲಾಗುವುದು. ಕಂದಾಯ ಸಚಿವರಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.



