ಬೆಂಗಳೂರು: ತಮ್ಮ ಸರ್ಕಾರದ 15 ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯಗೆ ದೆಹಲಿಗೆ ಬರುವವಂತೆ ಹೈಕಮಾಂಡ್ ಸೂಚನೆ ನೀಡಿದೆ. ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಈ ಬುಲಾವ್ ನೀಡಿದ್ದು, ಸೋಮವಾರ ಈ ಕುರಿತಂತೆ ರೇಣುಕಾಚಾರ್ಯ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಫೆ.7 ಅಥವಾ 8ರಂದು ರೇಣುಕಾಚಾರ್ಯ ದೆಹಲಿಗೆ ತೆರಳುವ ಸಾಧ್ಯತೆ ಇದೆ. ದೂರುವಾಣಿಯಲ್ಲಿ ಸಂಪರ್ಕಿಸಿದ ಅರುಣ್ ಸಿಂಗ್, ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ರೇಣುಕಾಚಾರ್ಯಗೆ ಕಾರಣ ಕೇಳಲಾಗಿದೆ. ಸ್ವಪಕ್ಷದ ಕೆಲ ಸಚಿವರು ಮತ್ತು ವಲಸೆ ಬಂದು ಸಚಿವರಾಗಿರುವ ಕೆಲವರ ವರ್ತನೆ ಬಗ್ಗೆ ರೇಣುಕಾಚಾರ್ಯ ಆಕ್ಷೇಪ ವ್ಯಕ್ತಪಡಿಸಿದರು.
ಸರ್ಕಾರದಲ್ಲಿರುವ ಬಹುತೇಕ ಸಚಿವರು ತಮ್ಮ ವ್ಯಾಪಾರ, ವ್ಯವಹಾರಕ್ಕಾಗಿ ಬಂದಾಗಿದೆ. ಇವರಿಗೆ ಶಾಸಕರ ಗೌರವ ಇಲ್ಲ. ಇವರಿಂದ ಪಕ್ಷಕ್ಕೆ ಶಕ್ತಿ ತರುವ ಯಾವ ಆಸಕ್ತಿಯೂ ಇಲ್ಲ. ತಮಗೆ ಬೇಕಾದವರ ಮೂಲಕ ವ್ಯವಹಾರದಲ್ಲಿ ಅಪಾರ ಪ್ರಮಾಣದ ಹಣ ತೊಡಗಿಸುತ್ತಿರುವ ಹಲವು ಸಚಿವರು ಇದೇ ಕಾರಣಕ್ಕಾಗಿ ಸರ್ಕಾರವನ್ನು ದಲ್ಲಾಳಿಗಳ ಮಾರುಕಟ್ಟೆಯನ್ನಾಗಿ ಮಾರ್ಪಡಿಸಿದ್ದಾರೆ.ಕೇಳಿದರೆ ಸರ್ಕಾರ ಬರಲು ತಾವು ಬಂಡವಾಳ ಹೂಡಿರುವುದಾಗಿ ಉಡಾಫೆಯ ಮಾತನಾಡುತ್ತಾರೆ ಎಂದು ಆರೋಪ ಮಾಡಿದ್ದರು.
ಸರ್ಕಾರ ಅಸ್ತಿತ್ವಕ್ಕೆ ಬರುವುದರ ಹಿಂದೆ ನಮ್ಮ ಶ್ರಮವೂ ಇದೆ. ಆದರೆ, ಅದನ್ನು ನಿರ್ಲಕ್ಷಿಸುವ ಕೆಲಸವಾಗುತ್ತಿದೆ. ಇದು ಹೀಗೇ ಮುಂದುವರಿದರೆ ಪಕ್ಷ ಕಷ್ಟಕ್ಕೆ ಸಿಲುಕುತ್ತದೆ.ವಲಸಿಗ ಸಚಿವರ ಪೈಕಿ ಕೆಲವರು ಈಗಾಗಲೇ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದು ಚುನಾವಣೆ ಹತ್ತಿರ ಬಂದಾಗ ಪುನಃ ಪಕ್ಷಾಂತರ ಮಾಡುತ್ತಾರೆ. ಇಂತಹವರ ಕ್ಷೇತ್ರದಲ್ಲಿ ಈಗಾಗಲೇ ಮೂಲ ಬಿಜೆಪಿಯವರ ಶಕ್ತಿಯೂ ಕುಗ್ಗಿದೆ. ಹೀಗಾಗಿ ಈ ವಿಷಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಿದೆ. ಇದೀಗ ಎಲ್ಲ ಮಾಹಿತಿಗಳೊಂದಿಗೆ ದಿಲ್ಲಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ.
ದೆಹಲಿ ಭೇಟಿ ನೀಡಿದ ಸಂದರ್ಭದಲ್ಲಿ ರೇಣುಕಾಚಾರ್ಯ ಅವರು ಅರುಣ್ ಸಿಂಗ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲ ನಾಯಕರನ್ನು ಭೇಟಿ ಮಾಡಲಿದ್ದಾರೆ.



