ಸರ್ಕಾರಿ ಜಮೀನಿನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಖಾಸಗಿ ಏಜೆನ್ಸಿಗಳಿಗೆ ಅವಕಾಶ ; ಇಂಧನ ಸಚಿವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಚಿತ್ರದುರ್ಗ: ಸರ್ಕಾರಿ ಜಮೀನಿನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಖಾಸಗಿ ಏಜೆನ್ಸಿಯವರಿಗೆ ಅವಕಾಶ ನೀಡಲಾಗುವುದು. ಪ್ರತಿ ಎಕರೆಗೆ ವರ್ಷಕ್ಕೆ ರೂ.25 ಸಾವಿರ ಹಣವನ್ನು ಜಿಲ್ಲಾಧಿಕಾರಿಗಳ ಬಳಿ ಡಿಪಾಸಿಟ್ ಮಾಡಿದವರಿಗೆ ಅವಕಾಶ ನೀಡಲಾಗುವುದು ಇಂಧನ ಸಚಿವ ಕೆ.ಜೆ. ಜಾರ್ಜ್ ಮಾಹಿತಿ ನೀಡಿದ್ದಾರೆ.

ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ “ಸೋಲಾರ್ ಪಾರ್ಕ್”ಗೆ ಭೇಟಿ ನೀಡಿ ಮಾತನಾಡಿದರು. ಈಗಾಗಲೇ ರಾಜ್ಯಾದ್ಯಂತ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಸ್ಥಳ ಗುರುತಿಸಲಾಗಿದ್ದು, ಮುಖ್ಯಮಂತ್ರಿಗಳ ಸೂಚನೆಯಂತೆ ಒಂದು ತಿಂಗಳಲ್ಲಿ 500 ರಿಂದ 600 ಮೆಗಾ ವ್ಯಾಟ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಅಗತ್ಯ ತಯಾರಿಗಳು ನಡೆದಿವೆ. ವಿದ್ಯುತ್ ಉಪಕೇಂದ್ರಗಳು ಇರುವ ಸ್ಥಳಗಳ ಹತ್ತಿರ ಒಂದು ಮೆಗಾ ವ್ಯಾಟ್ ಉತ್ಪಾದನೆಗೆ ಕನಿಷ್ಟ ಸುಮಾರು 4 ಎಕರೆ ಜಮೀನು ಅಗತ್ಯವಾಗಿ ಬೇಕಾಗುತ್ತದೆ. ವಿದ್ಯುತ್ ಉಪಕೇಂದ್ರದ ಸಾಮಥ್ರ್ಯಕ್ಕೆ ಅನುಗುಣವಾಗಿ ಸೋಲಾರ್ ಪಾರ್ಕ್‍ಗಳಲ್ಲಿ ವಿದ್ಯುತ್ ಉತ್ಪಾದನೆ ಮಾಡಿ ಅಲ್ಲಿಯೇ ಪೂರೈಕೆ ಮಾಡಿ ಕೊಡಲಾಗುವುದು ಎಂದು ತಿಳಿಸಿದ ಅವರು, ಈಗಾಗಲೇ 1200 ಮೆಗಾ ವ್ಯಾಟ್ ಹಂಚಿಕೆಯಾಗಿದ್ದು, ಬಾಕಿ ಇರುವುದಕ್ಕೂ ಟೆಂಡರ್ ಕರೆಯಲಾಗಿದೆ ಎಂದು ಹೇಳಿದರು.

ರೈತರ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಈ ಯೋಜನೆಯಡಿ ಖಾಸಗಿಯವರು ಬಂಡವಾಳ ಹೂಡಿಕೆ ಮಾಡುತ್ತಾರೆ. ಸರ್ಕಾರದಿಂದ ಲಭ್ಯವಿರುವೆಡೆ ಸರ್ಕಾರಿ ಭೂಮಿ ನೀಡಲಾಗುವುದು, ಅಲ್ಲದೆ ಸೋಲಾರ್ ಘಟಕಗಳಲ್ಲಿ ಉತ್ಪಾದಿಸುವ ವಿದ್ಯುತ್ ಅನ್ನು ಸರ್ಕಾರವೇ ಗರಿಷ್ಟ 3.17 ರೂ. ನಂತೆ ಖರೀದಿ ಮಾಡಲಾಗುವುದು. ಸರ್ಕಾರಿ ಜಮೀನಿನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಪ್ರತಿ ಎಕರೆಗೆ ರೂ.25 ಸಾವಿರಹಣವನ್ನು ಖಾಸಗಿ ಏಜೆನ್ಸಿಯವರು ಪ್ರತಿ ವರ್ಷ ಪಾವತಿಸಬೇಕು, ಈ ಹಣವನ್ನು ಜಿಲ್ಲಾಧಿಕಾರಿಗಳ ಬಳಿ ಡಿಪಾಸಿಟ್ ಮಾಡಲಾಗುವುದು. ಆಯಾ ಕ್ಷೇತ್ರದ ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಆಯಾ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆ, ಅಂಗನವಾಡಿ, ಆಸ್ಪತ್ರೆ ಅಭಿವೃದ್ಧಿಗೆ ಅನುದಾನ ಬಳಕೆ ಮಾಡಬಹುದಾಗಿದೆ. ಈ ಯೋಜನೆಯಿಂದ ರೈತರಿಗೆ ರಾತ್ರಿಯ ಜೊತೆಗೆ ಹಗಲಿನಲ್ಲಿಯೂ ಉತ್ತಮ ವಿದ್ಯುತ್ ದೊರೆಯಲಿದ್ದು, ನಿದ್ದೆಗೆಟ್ಟು ನೀರಿಗಾಗಿ ಪರಿತಪಿಸುವುದು ತಪ್ಪಲಿದೆ ಎಂದರು.

ತೋಟದ ಮನೆಗಳಿಗೆ ಹಗಲು ಹೊತ್ತು 03 ಫೇಸ್ ಹಾಗೂ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಕೊಡಲು ಈಗಾಗಲೇ ನಿರ್ಣಯ ಮಾಡಲಾಗಿದ್ದು, ಎಲ್ಲ ಗ್ರಾಮಗಳಿಗೆ ನಿರಂತರ ಜ್ಯೋತಿ ಯಡಿ ವಿದ್ಯುತ್ ಪೂರೈಸಲು ಟೆಂಡರ್ ಪ್ರಕ್ರಿಯೆ ನಡೆದಿದ್ದು, ಶೀಘ್ರ ಕಾರ್ಯಾದೇಶ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೇರಿದಂತೆ ಇಂಧನ ಇಲಾಖೆಯ ಅಧಿಕಾರಿಗಳು, ರೈತರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *