ಬೆಂಗಳೂರು: ಪ್ರತಿ ಲೀಟರ್ ಹಾಲಿಗೆ ಕನಿಷ್ಠ 3 ರೂ.ಗಳನ್ನು ಹೆಚ್ಚಿಗೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ 30 ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಖಾಸಗಿ ಸಂಸ್ಥೆಗಳ ದರವು ಪ್ರತಿ ಲೀಟರ್ಗೆ ರೂ. 8 ರಿಂದ 10 ರೂ.ಗೆ ಹೆಚ್ಚಳವಾಗಿದೆ. ಹಾಲಿನ ಮಾರಾಟ ದರವು ಕನಿಷ್ಠ ಪ್ರತಿ ಲೀಟರ್ಗೆ 3 ರೂ. ಹೆಚ್ಚಿಸಲು ಮುಖ್ಯಮಂತ್ರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಹೆಚ್ಚಳ ಮಾಡಲಿರುವ 3 ರೂ.ಗಳಲ್ಲಿ ಕನಿಷ್ಠ ರೂ. 2 ನ್ನು ಹಾಲು ಉತ್ಪಾದಕರಿಗೆ ಮತ್ತು ಉಳಿದ 1 ರೂ.ನ್ನು ಹಾಲು ಉತ್ಪಾದಕರ ಸಹಕಾರಿ ಸಂಘ, ಹಾಲು ಒಕ್ಕೂಟ ಮತ್ತು ಹಾಲು ಮಾರಾಟಗಾರರಿಗೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.ಕೆಎಂಎಫ್ ಹಾಗೂ ರಾಜ್ಯದಲ್ಲಿರುವ ಎಲ್ಲ 14 ಹಾಲು ಒಕ್ಕೂಟಗಳ ಒಟ್ಟಾರೆ ವಹಿವಾಟು 2019-20 ರಲ್ಲಿ 16,440.74 ಕೋಟಿ ರೂ. ಇದ್ದು, ಪ್ರಸಕ್ತ ಸಾಲಿಗೆ 19,732 ಕೋಟಿ ರೂ.ಗಳಿಗೆ ಹೆಚ್ಚಳವಾಗಿದೆ. 2 ವರ್ಷಗಳ ಅವಧಿಯಲ್ಲಿ ಶೇ 20 ರಷ್ಟು ವಹಿವಾಟು ಹೆಚ್ಚಳವಾಗಿದ್ದು, 2022-23ನೇ ಸಾಲಿನಲ್ಲಿ ಒಟ್ಟಾರೆ 25 ಸಾವಿರ ಕೋಟಿ ರೂ. ತಲುಪುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದಿದ್ದಾರೆ.



