ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಇದರಲ್ಲಿ ಏನಾದರೂ ಸಮಸ್ಯೆ ಇದ್ದರೆ ಪರಿಹಾರ ಕಂಡುಕೊಳ್ಳೋಣ. ಆದರೆ, ಸಂಕಷ್ಟದ ಸಂದರ್ಭದಲ್ಲಿ ಹಠಕ್ಕೆ ಬಿದ್ದು ಮುಷ್ಕರ ನಡೆಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ 8 ಬೇಡಿಕೆಗಳಲ್ಲಿ ಏನಾದರೂ ಸಮಸ್ಯೆ ಇದ್ದರೆ, ಅದನ್ನು ಸರಿಪಡಿಸುತ್ತೇವೆ. ಆದರೆ, 6ನೇ ವೇತನ ಆಯೋಗ ಜಾರಿ ಮಾತ್ರ ಸಾಧ್ಯವೇ ಇಲ್ಲ. ಸಾರಿಗೆ ಇಲಾಖೆ ಇರುವುದು ಸಾರ್ವಜನಿಕರ ಸೇವೆಗೆ, ಬಸ್ ಸಂಚಾರವಿಲ್ಲದೇ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.
ಸರ್ಕಾರದ ಹಣಕಾಸಿನ ಸಂಕಷ್ಟ ಅರ್ಥಮಾಡಿಕೊಂಡು ಕರ್ತವ್ಯಕ್ಕೆ ಹಾಜರಾಗಬೇಕು. ಇಂದಿನ ಪರಿಸ್ಥಿತಿಯಲ್ಲಿ 6ನೇ ವೇತನ ಆಯೋಗ ಜಾರಿ ಮಾಡಲು ಸಾಧ್ಯವೇ ಇಲ್ಲ. ಹಠವನ್ನು ನಿಲ್ಲಿಸಿ ಕೆಲಸಕ್ಕೆ ಹಾಜರಾಗಿ. ಯಾರದೋ ಮಾತು ಕೇಳಿ ಈ ರೀತಿ ಮುಷ್ಕರ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.



