ಡಿವಿಜಿ ಸುದ್ದಿ, ಬೆಂಗಳೂರು: ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕಿದ್ದು, ಅ.11ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಕಾಗಿನೆಲೆಯ ಶ್ರೀ ರಂಜನಾನಂದಪುರಿ ಸ್ವಾಮೀಜಿ ಹೇಳಿದರು.
ಎಸ್.ಟಿ ಹೋರಾಟ ಸಮಿತಿಯಿಂದ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯದ ಬಹಳ ದಿನಗಳ ಬೇಡಿಕೆಗೆ ಹೋರಾಟ ರೂಪಿಸಬೇಕಿದೆ. ತಿಂಗಳ 11ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ಹೋರಾಟದ ಬಗ್ಗೆ ರೂಪುರೇಷ ಸಿದ್ಧಪಡಿಸಲಾಗುವುದು. ಈ ಹೋರಾಟದಿಂದ ಎಸ್ಟಿ ಸಮುದಾಯಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಎಲ್ಲ ಹಿಂದುಳಿದ ವರ್ಗಗಳನ್ನು ಒಟ್ಟಿಗೆ ಮೇಲಕ್ಕೆತ್ತಬೇಕೆಂಬುದೇ ನಮ್ಮ ಉದ್ದೇಶ. ಎಸ್ಟಿ ಸಮುದಾಯಕ್ಕೆ ಸೇರಿರುವ ಸಮುದಾಯಗಳು ಶೇ.3ರ ಬದಲಿಗೆ 7% ಮೀಸಲಾತಿ ಕೇಳುತ್ತಿದ್ದಾರೆ. ಅದಕ್ಕೆ ನಮ್ಮ ಸಹಮತವಿದೆ ಎಂದರು.
ಸಮಾಜದ ಮುಖಂಡ ಎಚ್.ಎಂ ರೇವಣ್ಣ ಮಾತನಾಡಿ, ಮೊದಲಿನಿಂದಲೂ ಎಸ್ಟಿ ಸಮುದಾಯಕ್ಕೆ ಸೇರಿಸುವಂತೆ ಹೋರಾಟ ನಡೆಯುತ್ತಿದೆ. ನಮ್ಮ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಆಗಿರಲಿಲ್ಲ. ಈಗ ಸಚಿವ ಕೆ.ಎಸ್ ಈಶ್ವರಪ್ಪ ಇದರ ನೇತೃತ್ವ ವಹಿಸಿದ್ದಾರೆ. ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ನಮ್ಮ ಹಕ್ಕು ಪಡೆಯಲು ವೇದಿಕೆ ಸಿದ್ಧಗೊಳಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಈಶ್ವರಾನಂದಪುರಿ ಸ್ವಾಮೀಜಿ, ಸಿದ್ದರಾಮಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಸಚಿವ ಕೆ.ಎಸ್ ಈಶ್ವರಪ್ಪ, ಮಾಜಿ ಸಂಸದ ವಿರೂಪಾಕ್ಷಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.



