ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಾಳೆ ಭಾರತ್ ಬಂದ್ಗೆ ಕರೆ ಕೊಡಲಾಗಿದೆ. ರಾಜ್ಯದಲ್ಲಿಯೂ ಕೂಡ ಪ್ರತಿಭಟನೆ ನಡೆಯಲಿದ್ದು, ಕೃಷಿ ಕಾಯ್ದೆಗಳ ಶವಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ರಾಜ್ಯದ ಎಲ್ಲ ನಗರ, ಜಿಲ್ಲಾ ಕೇಂದ್ರಗಳಲ್ಲಿ ಕೃಷಿ ಕಾಯ್ದೆಗಳ ಶವಯಾತ್ರೆ ನಡೆಸಿದ ಪ್ರತಿಭಟನೆ ನಡೆಸಲಾಗುವುದು. ನಾಳೆ ಬೆಂಗಳೂರಿನಲ್ಲಿ ಟೌನ್ಹಾಲ್ನಿಂದ ಮೈಸೂರ್ ಬ್ಯಾಂಕ್ ವೃತ್ತದವರೆಗೆ ಕೃಷಿ ಕಾಯ್ದೆಗಳ ಶವಯಾತ್ರೆ ನಡೆಯಲಿದ್ದು, ನಾಯಂಡಹಳ್ಳಿ ಸುತ್ತಮುತ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಐಕ್ಯ ಹೋರಾಟ ಸಮಿತಿ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ದೆಹಲಿಯಲ್ಲಿ ರೈತರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಇದನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯಲಿದೆ. ರಾಷ್ಟ್ರೀಯ ರೈತ ಮುಖಂಡರು ದೇಶದ ವಿವಿಧೆಡೆ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿ ರೈತ ವಿರೋಧಿ ಧೋರಣೆಗಳನ್ನು ಖಂಡಿಸಿದ್ದಾರೆ.
ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆ ನಾಳೆಗೆ ನಾಲ್ಕು ತಿಂಗಳು ಪೂರೈಸಲಿದ್ದು, ಇದರ ಅಂಗವಾಗಿ ರಾಷ್ಟ್ರೀಯ ಸಂಯುಕ್ತ ಕಿಸಾನ್ಮೋರ್ಚ ಭಾರತ್ ಬಂದ್ಗೆ ಕರೆ ನೀಡಿದೆ. ಈ ಕರೆಯನ್ನು ರಾಜ್ಯದ ರೈತರು ಕೂಡ ಬೆಂಬಲಿಸಿದ್ದು, ಇದರ ಅಂಗವಾಗಿ ಶವಯಾತ್ರೆ, ಪ್ರತಿಭಟನೆ ನಡೆಸಲಿದ್ದೇವೆ ಎಂದರು.
ರಾಷ್ಟ್ರೀಯ ಕಿಸಾನ್ ಮಹಾಪಂಚಾಯತ್ನ ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯಿತ್ ಅವರು ಬೇಡಿಕೆ ಈಡೇರಿಕೆವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದದಿದ್ದಾರೆ. ಅವರಿಗೆ ನಾವು ಬೆಂಬಲವಾಗಿ ನಿಲ್ಲುತ್ತೇವೆ. ಜನ ವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬಕೆಂದು ಆಗ್ರಹಿಸಿದರು.
ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಕಳೆದ 6 ತಿಂಗಳಲ್ಲಿ ಮೂರು ಬಂದ್ ಮಾಡಲಾಗಿದೆ. ರಾಜ್ಯದ ರೈತರು ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಈ ಬಾರಿ ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚ ಕರೆ ನೀಡಿರುವ ಭಾರತ್ ಬಂದ್ಗೆ ಪೂರ್ವ ಯೋಜಿತವಾಗಿ ರೈತ ಸಂಘಟನೆಗಳು ಚರ್ಚಿಸದೇ ಇರುವ ಕಾರಣ ಬಂದ್ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿಲ್ಲ. ಬಂದ್ ಬದಲಾಗಿ ಕೃಷಿ ಕಾಯ್ದೆಗಳ ಶವಯಾತ್ರೆ ನಡೆಸುವ ಮೂಲಕ ಬಂದ್ಗೆ ಬೆಂಬಲಿಸಲಿದ್ದೇವೆ ಎಂದು ಹೇಳಿದರು.



