ನವದೆಹಲಿ: ಕೋವಿಡ್ ಹಿನ್ನೆಲೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ (PMGKAY) ಉಚಿತ ಪಡಿತರ ಅಕ್ಕಿ ವಿತರಿಸಲಾಗುತ್ತಿತ್ತು. ಇದೀಗ ನವೆಂಬರ್ 30 ರ ನಂತರ ಉಚಿತ ಅಕ್ಕಿ ವಿತರಣೆ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಆಹಾರ ಮತ್ತು ಸಾರ್ವಜನಿಕ ವಿತರಣ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ಆರ್ಥಿಕತೆ ಪುನರುಜ್ಜೀವನದ ಹಂತದಲ್ಲಿರುವ ಕಾರಣ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ವಿಸ್ತರಿಸುವ ಯಾವುದೇ ಪ್ರಸ್ತಾಪವಿಲ್ಲ. ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಯಲ್ಲಿ ದೇಶದ 80 ಕೋಟಿ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ. ಆರ್ಥಿಕತೆಯಲ್ಲಿ ಚೇತರಿಕೆ ಕಂಡಿದೆ. ಹೀಗಾಗಿ ನವೆಂಬರ್ 30ರ ನಂತರ ಉಚಿತ ಪಡಿತರವನ್ನು ವಿಸ್ತರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.
ಆರ್ಥಿಕತೆಯಲ್ಲಿ ಚೇತರಿಕೆ ಮತ್ತು ಒಎಂಎಸ್ಎಸ್ ನೀತಿಯಡಿಯಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಉತ್ತಮ ವಿಲೇವಾರಿ ದೃಷ್ಟಿಯಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ(ಪಿಎಂಜಿಕೆಎವೈ) ಮೂಲಕ ಉಚಿತ ಪಡಿತರ ವಿತರಣೆಯನ್ನು ನವೆಂಬರ್ 30 ರ ನಂತರ ವಿಸ್ತರಿಸುವ ಯಾವುದೇ ಪ್ರಸ್ತಾವನೆಯನ್ನು ಕೇಂದ್ರ ಹೊಂದಿಲ್ಲ. PMGKAY ಅನ್ನು ಮಾರ್ಚ್ 2020 ರಲ್ಲಿ ಘೋಷಿಸಲಾಯಿತು. ನಂತರ ಏಪ್ರಿಲ್-ಜೂನ್ 2021 ಅವಧಿಗೆ ಪ್ರಾರಂಭಿಸಲಾಗಿತ್ತು. ಆದರೆ ನಂತರ ಅದನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.



