ಬೆಂಗಳೂರು: ಕೃಷಿ ವಿಧೇಯಕಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ಸಲುವಾಗಿ ಇಂದು ಜಂಟಿ ಅಧಿವೇಶನದ ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ನಿರ್ಧರಿಸಿದ್ದಾರೆ.
ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ನಿರ್ಧರಿಸಿದೆ. ರಾಜ್ಯ ಸಭಾ ಸದಸ್ಯರಾಗಿರುವ ದೇವೇಗೌಡ ಅವರು ಸಹ ಬಹಿಷ್ಕಾರ ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೃಷಿ ಕಾಯ್ದೆಗಳನ್ನು ವಿರೋಧಿಸಿ ನನ್ನ ರೈತ ಸಹೋದರರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಹಾಜರಾಗದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
In solidarity with my farmer brothers fighting against the three #FarmLaws, I have decided, after consulting my party @JanataDal_S units, not to attend the President’s joint address of Parliament today.
— H D Devegowda (@H_D_Devegowda) January 29, 2021
ಕಾಂಗ್ರೆಸ್, ಎನ್ಸಿಪಿ, ಶಿವಸೇನಾ, ಟಿಎಂಸಿ, ಬಿಎಸ್ಪಿ ಸೇರಿ 16 ವಿರೋಧ ಪಕ್ಷಗಳು ಭಾಷಣ ಬಹಿಷ್ಕರಿಸಿವೆ. ಕೇಂದ್ರದ ಆಡಳಿತಾರೂಢ ಮೈತ್ರಿಕೂಟ ಎನ್ಡಿಎಯ ಭಾಗವಾಗಿದ್ದ ಶಿರೋಮಣಿ ಅಕಾಲಿ ದಳ ಕೂಡ ಇಂತಹುದೇ ನಿರ್ಧಾರ ಕೈಗೊಂಡಿದೆ. ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲವಾಗಿ ಈ ಕ್ರಮ ಎಂದು ವಿರೋಧ ಪಕ್ಷಗಳು ಹೇಳಿವೆ.



