ಡಿವಿಜಿ ಸುದ್ದಿ, ಬಾಗಲಕೋಟೆ: ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ, ಮಾಡು ಇಲ್ಲವೇ ಮಡಿ ಹೋರಾಟ ಅನಿವಾರ್ಯ ಎಂದು ದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಪಂಚಮಸಾಲಿ ಸಮಾಜದವರು ಸೌಮ್ಯ ಸ್ವಭಾವದವರು ಎಂದು ಹಿಂದಿನ ಸರ್ಕಾರಗಳು ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿವೆ. ನಾವು ಕಿತ್ತೂರು ರಾಣಿ ಚೆನ್ನಮ್ಮನ ಮಕ್ಕಳು ಹೋರಾಟ ಮಾಡಿಯಾದರೂ ಸರಿ ನಮ್ಮ ಹಕ್ಕು ಪಡೆಯಲಿದ್ದೇವೆ ಎಂದು ಸ್ವಾಮೀಜಿ ಹೇಳಿದರು.
ಬಿ.ಎಸ್ . ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಕಾರ್ಯದಲ್ಲಿ ಪಂಚಮಸಾಲಿ ಸಮಾಜದ ಕೊಡುಗೆ ಅಪಾರವಾಗಿದೆ. ಸಮಾಜದ ಶೇ. 70ರಷ್ಟು ಮಂದಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಈ ಅವಧಿಯಲ್ಲಿಯೇ ಯಡಿಯೂರಪ್ಪ ಸಮಾಜದ ಋಣ ತೀರಿಸುವ ವಿಶ್ವಾಸವಿದೆ ಎಂದರು.
ಪಂಚಮಸಾಲಿ ಸಮಾಜ ಸೇರಿದಂತೆ ಲಿಂಗಾಯತ ಸಮುದಾಯದ 42 ಉಪ ಪಂಗಡಗಳನ್ನು 2ಎಗೆ ಪ್ರವರ್ಗಕ್ಕೆ ಸೇರಿಸುವ ಬೇಡಿಕೆಗೆ 2012ರಲ್ಲಿ ಆಗಿನ ಸರ್ಕಾರ ಸ್ಪಂದಿಸಿತ್ತು. ಆಗ ಸಚಿವ ಸಿ.ಎಂ.ಉದಾಸಿ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸರ್ಕಾರ ಸಿ.ಎಂ.ಉದಾಸಿ ಸಮಿತಿ ವರದಿಯನ್ನು ಕೂಡಲೇ ಜಾರಿಗೊಳಿಸಲಿ ಎಂದು ಒತ್ತಾಯಿಸಿದರು.
2ಎನಲ್ಲಿರುವ ದೊಡ್ಡ ಸಮುದಾಯ ಹಾಲುಮತ ಸಮಾಜದವರು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆ ಇಟ್ಟಿದ್ದಾರೆ. ವಾಲ್ಮೀಕಿ ಸಮುದಾಯದ ಬೇಡಿಕೆಯಂತೆ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಳಗೊಳಿಸಲಿ ಎಂದರು.



