ಬೆಳಗಾವಿ: ಬೆಳಗಾವಿ ಉಪ ಚುನಾವಣೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ, ಕಾಂಗ್ರೆಸ್ ನಾಯಕ ಲಖನ್ ಜಾರಕಿಹೊಳಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.
ಬೆಳಗಾವಿ ಉಪಚುನಾವಣೆಗೆ ಕೆಲದಿನಗಳು ಬಾಕಿ ಇರುವ ಬೆನ್ನಲ್ಲೇ ಲಖನ್ ಜಾರಕಿಹೊಳಿ ಈ ನಿರ್ಧಾರಕ್ಕೆ ಬಂದಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ್ದ ಲಖನ್ ಜಾರಕಿಹೊಳಿ ಮನೆಗೆ ಇಂದು ಸಚಿವರಾದ ಜಗದೀಶ್ ಹೆಟ್ಟರ್, ಉಮೇಶ್ ಕತ್ತಿ, ಭೈರತಿ ಬಸವರಾಜ್ ಭೇಟಿ ನೀಡಿ ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ರು.
ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಕಣಕ್ಕಿಳಿದಿದ್ದು, ಬಿಜೆಪಿಯಿಂದ ದಿ.ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಕಣಕ್ಕಿಳಿದಿದ್ದಾರೆ. ಇದೀಗ ಬೆಳಗಾವಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಕಣವಾಗಿದೆ.
ಕಾಂಗ್ರೆಸ್ ನಾಯಕ ಲಖನ್ ಬಿಜೆಪಿ ಸೇರ್ಪಡೆಗೆ ನಿರ್ಧರಿಸಿದ್ದಾರೆ. ಈ ವೇಳೆ ಮಾತನಾಡಿದ ಲಖನ್ ಜಾರಕಿಹೊಳಿ, ಉಪಚುನಾವಣೆಯಲ್ಲಿ ತಾವು ಬಿಜೆಪಿಗೆ ಬೆಂಬಲಿಸುತ್ತಿದ್ದು, ಪಕ್ಷ ಸೇರ್ಪಡೆ ಬಗ್ಗೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಜೊತೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದರು. ಇನ್ನು ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಯಾಕೆಂದು ಅರ್ಥವಾಗುತ್ತಿಲ್ಲ. ಅವರ ಪರ ಪ್ರಚಾರ ಮಾಡಲು ಮುಜುಗರವಾಗುತ್ತದೆ ಎಂದು ಹೇಳಿದ್ದಾರೆ.



