ಡಿವಿಜಿ ಸುದ್ದಿ, ಬೆಂಗಳೂರು: ಉಪ ಚುನಾವಣೆಯ ಅಭ್ಯರ್ಥಿ ಪಟ್ಟಿಯನ್ನು ಇಂದು ಹೈಕಮಾಂಡ್ ಗೆ ಶಿಫಾರಸು ಮಾಡುತ್ತೇವೆ. ಹೈಕಮಾಂಡ್ ಟಿಕೆಟ್ ಪ್ರಕಟಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಶಿರಾ, ರಾಜರಾಜೇಶ್ವರಿ ನಗರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಟಿಕೆಟ್ ಅಂತಿಮ ಆಗುತ್ತದೆ. ಶಿರಾ ಕ್ಷೇತ್ರದಲ್ಲಿ ಈ ಹಿಂದೆ ಜಯಚಂದ್ರ 10 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಇಡೀ ಜಿಲ್ಲೆಯ ನಾಯಕರು ಒಂದಾಗಿದ್ದಾರೆ. ರಾಜ್ಯ ಸರ್ಕಾರದ ಕಾರ್ಯಕ್ರಮ ಮತ್ತು ಆಗುತ್ತಿರುವ ಬೆಳವಣಿಗೆ ನೋಡಿದ್ದೇವೆ. ಮುಂದೆ ಕಾಂಗ್ರೆಸ್ ಮಾತ್ರ ಅನಿವಾರ್ಯ ಅಂತ ಶಿರಾ ತಾಲೂಕಿನ ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ ಎಂದು ತಿಳಿಸಿದರು.
ಯಾರು ಪಕ್ಷಕ್ಕೆ ದುಡಿಯುತ್ತಾರೋ ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗುತ್ತದೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬಂದವರನ್ನು ಸೇರ್ಪಡೆ ಮಾಡಿಕೊಳ್ಳುತ್ತೇವೆ. ನೂರು ಜನ ಮುಖಂಡರು ಪಕ್ಷ ಸೇರ್ಪಡೆ ಆಗಿದ್ದಾರೆ. ಇವರ ಹಿಂದೆ ಸಾವಿರಾರು ಜನ ಪಕ್ಷ ಸೇರುತ್ತಾರೆ. ಇದರಿಂದ ಪಕ್ಷದ ಶಕ್ತಿ ಮತ್ತಷ್ಟು ಹೆಚ್ಚಾಗಲಿದೆ. ನಮ್ಮಲ್ಲಿ ಹೊಸಬರು ಹಳಬರು ಅಂತ ನೋಡಲ್ಲ, ಕಾಂಗ್ರೆಸ್ ಪಕ್ಷ ಅಷ್ಟೇ ಮುಖ್ಯ ಎಂದರು.
ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳ ವಿರುದ್ಧ 2 ಕೋಟಿ ಸಹಿ ಸಂಗ್ರಹ ಮಾಡುವ ಯೋಜನೆ ಹಮ್ಮಿಕೊಂಡಿದ್ದೇವೆ. ಪ್ರತಿ ಪಂಚಾಯತ್ ಮಟ್ಟದಲ್ಲಿ ಸಹಿ ಸಂಗ್ರಹ ಮಾಡಬೇಕು. ಪ್ರತಿ ಪಂಚಾಯತಿಯಲ್ಲಿ 1 ಸಾವಿರ ಜನರ ಸಹಿ ಮಾಡಿಸಬೇಕು. ಅಕ್ಟೋಬರ್ 31ರೊಳಗೆ ಸಹಿ ಸಂಗ್ರಹ ಮಾಡಿಸಿ ಕೆಪಿಸಿಸಿಗೆ ಕಳುಹಿಸಿಕೊಡಬೇಕು ಎಂದರು.



