ಬೆಂಗಳೂರು: ಸಿಡಿ ಪ್ರಕರಣದಲ್ಲಿ ಯುವತಿ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ, ಗೃಹಸಚಿವರು ಹಾಗೂ ಸರ್ಕಾರವೇ ಹೊಣೆಯಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ @BSYBJP, ಗೃಹಸಚಿವ @BSBommai ಮತ್ತು ಇಡೀ @BJP4Karnataka ಸರ್ಕಾರವೇ ಹೊಣೆಯಾಗುತ್ತದೆ. 2/5#Jarkiholi_CDcase
— Siddaramaiah (@siddaramaiah) March 29, 2021
ಕುರಿತು ಟ್ವಿಟ್ ಮಾಡಿದ ಅವರು, ಯುವತಿ ಬರೆದ ಪತ್ರದಲ್ಲಿ ಎಸ್.ಐ.ಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿದ್ದಾಳೆ. ಅವರು ಸಾಕ್ಷ್ಯನಾಶ ಮಾಡುತ್ತಿದ್ದು, ತನ್ನ ವಿರೋಧಿಗಳ ಜೊತೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವುದು ಗಂಭೀರವಾದ ವಿಷಯ ಎಂದಿದ್ದಾರೆ. ತನಗೆ ಪ್ರಾಣ ಭಯ ಇದೆ ಎಂದು ಆಕೆ ಬರೆದಿರುವುದು ಆತಂಕದ ವಿಚಾರ, ಯಡಿಯೂರಪ್ಪ ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿ ಇದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸಂತ್ರಸ್ಥ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರ ವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ, ಪೊಲೀಸರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು? ಎಂದು ಅನುಮಾನ ವ್ಯಕ್ತ ಪಡಿಸಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ? ಎಂದು ಕುಟುಕಿದ್ದಾರೆ.



