ತುಮಕೂರು: ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ 9 ಕೂಲಿ ಕಾರತಮಿಕರು ದುರಂತ ಸಾವಿಗೀಡಾಗಿದ್ದಾರೆ. 4ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ.
ಈ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕ್ರೂಸರ್ ಹಾಗೂ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಕೂಲಿ ಕೆಲಸಕ್ಕೆಂದು ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಬೆಂಗಳೂರಿಗೆ ಬರುತ್ತಿದ್ದರು. 20 ಜನ ಕ್ರೂಸರ್ ವಾಹನದಲ್ಲಿದ್ರು. ಲಾರಿ ಓವರ್ ಟೇಕ್ ಮಾಡಲು ಹೋಗಿ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 9 ಜನ ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ 4.30 ಗಂಟೆಗೆ ಈ ಘಟನೆ ನಡೆದಿದೆ. ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಅದೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಹಾಗೂ ಶಿರಾ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.