ಡಿವಿಜಿಸುದ್ದಿ.ಕಾಂ , ದಾವಣಗೆರೆ: ಬಳ್ಳಾರಿ ಜಿಲ್ಲೆಯ ಸೊಂಡೂರು ತಾಲ್ಲೂಕಿನ ವಡ್ಡು ಗ್ರಾಮದ ೬ ವರ್ಷದ ಅಪ್ರಾಪ್ತೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ನಗರದ ಜಯದೇವ ವೃತ್ತದ ಬಳಿ ಮಡಿವಾಳ ಮಾಚಿದೇವ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಕೃತ್ಯ ಎಸಗಿದವರ ವಿರುದ್ಧ ಸೂಕ್ತ ತನಿಖೆ ಆಗಬೇಕು. ಪ್ರಕರಣದಲ್ಲಿ ಭಾಗಿಯಾವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿ, ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮಗುವಿಗೆ ಚಾಕಲೇಟ್ ಆಸೆ ತೋರಿಸಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು, ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವಿನ ತಂದೆ ರೇವಣ್ಣ ಎಂಬಾತ ವಡ್ಡು ಗ್ರಾಮದಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಮಡಿವಾಳ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಸೆ.೮ ರಂದು ಕಾಣೆಯಾದ ಮಗು ೧೦ರಂದು ಮಂಗಳವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದೆ. ಈ ಮೊದಲು ಕಾಣೆಯಾದ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ನಂತರ ಬಾಲಕಿಯ ಶವ ದೊರೆತ ಸ್ಥಳ ಪರಿಶೀಲಿಸಿ, ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಡಿವಾಳ ಸಂಘದ ಜಿಲ್ಲಾಧ್ಯಕ್ಷ ಎಂ.ಎನ್.ನಾಗೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಓಂಕಾರಪ್ಪ, ಕಾರ್ಯಾಧ್ಯಕ್ಷ ಹೆಚ್.ಜಿ.ಉಮೇಶ್, ಖಜಾಂಚಿ ಆರ್.ಎನ್. ಧನಂಜಯ, ಸುರೇಶ್ ಕೋಗುಂಡೆ, ಉಪಾಧ್ಯಕ್ಷರಾದ ವಿಜಯಕುಮಾರ್, ಪಿ.ಮಂಜುನಾಥ್, ಡೈಮಂಡ್ ಮಂಜುನಾಥ್, ಪತ್ರಕರ್ತ ಎಂ.ವೈ.ಸತೀಶ್, ರೈತ ಮುಖಂಡ ಅಂಜಿನಪ್ಪ ಪೂಜಾರ್, ಎಂ.ರುದ್ರೇಶ್, ಸಿ.ಗುಡ್ಡಪ್ಪ, ಪರುಶರಾಮ್, ಬಸವರಾಜಪ್ಪ ಕುಂದವಾಡ, ಅನ್ನಪೂರ್ಣಮ್ಮ ಬಸವರಾಜಪ್ಪ, ನಾಗಮ್ಮ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336, 7483892205



