ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆ ಒಂದನೇ ತರಗತಿಯಿಂದ 8ನೇ ತರಗತಿಯವರೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಫೇಸ್ ಬುಕ್ ಲೈವ್ ನಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಸಚಿವರು, ಈ ಹಿಂದೆ ಒಂದರಿಂದ ಆರನೇ ತರಗತಿಯವರೆಗೆ ಮಕ್ಕಳನ್ನು ಪಾಸ್ ಮಾಡುವಂತೆ ಸೂಚಿಸಲಾಗಿತ್ತು. ಇದೀಗ ಏಳು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳನ್ನೂ ಯಾವುದೇ ಪರೀಕ್ಷೆ ನಡೆಸದೇ ಪಾಸ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ನಡೆಸಲು ಇಚ್ಛಿಸಲಾಗಿತ್ತು. ಆದರೆ, ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಂಟನೇ ತರಗತಿ ಆರಂಭವಾದ ಪ್ರಾರಂಭದಲ್ಲಿ ಮೌಲ್ಯಾಂಕನ ನಡೆಸಲಾಗುವುದು ಎಂದರು.
ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿದ್ಯಾರ್ಥಿಗಳಿಗೆ ಫಾರ್ಮೇಟೀವ್ , ಸಮ್ಮೇಟೀವ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರ ಆಧಾರದ ಮೇಲೆ 10ನೇ ತರಗತಿಗೆ ಪಾಸ್ ಮಾಡಲಾಗುತ್ತದೆ. ಈ ಎರಡು ಆಂತರಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇರುವ ವಿದ್ಯಾರ್ಥಿಗಳಿಗೆ ರಜಾ ಅವಧಿಯಲ್ಲಿ ಶಾಲೆಗಳು ಸೂಕ್ತ ಮಾರ್ಗದರ್ಶನ ನೀಡಿ, ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೂಕ್ತ ಪರೀಕ್ಷೆ ನಡೆಸಿ ಉತ್ತೀರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂದ ಏ.14ರ ನಂತರ ಪರಿಸ್ಥಿತಿ ನೋಡಿಕೊಂಡು, ಪರಿಷ್ಕೃತ ವೇಳಾ ಪಟ್ಟಿ ಪ್ರಕಟಿಸಲಿದ್ದೇವೆ. ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯ ದಿನಾಂಕ ತೀರ್ಮಾನಿಸಲಿದ್ದೇವೆ ಎಂದರು.



