ಡಿವಿಜಿ ಸುದ್ದಿ, ಬೆಂಗಳೂರು: ರೈತ ಸಂಪರ್ಕ ಕೇಂದ್ರ ತೆರೆಯದ ಮೂರು ಅಧಿಕಾರಿಗಳನ್ನು ಕರ್ತವ್ಯ ಲೋಪ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಸೂಚನೆ ಮೇರೆಗೆ ಕೃಷಿ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂಬ ಉದ್ದೇಶದಿಂದ ರೈತ ಸಂಪರ್ಕ ಕೇಂದ್ರಗಳು, ಕೃಷಿ ಪರಿಕರ ಮಾರಾಟ ಮಳಿಗೆಗಳು ಮತ್ತು ಕೃಷಿ ಯಂತ್ರಧಾರೆಗಳನ್ನು ತೆರೆದು ರೈತರಿಗೆ ಅಗತ್ಯ ಸೇವೆಯನ್ನು ಒದಗಿಸಲು ಸುತ್ತೋಲೆ ಮೂಲಕ ಸೂಚಿಸಲಾಗಿತ್ತು. ಸಚಿವರ ಸೂಚನೆ ಹಾಗೂ ಇಲಾಖೆಯ ಸುತ್ತೋಲೆ ಸೂಚನೆ ಇದ್ದರೂ ದೇವನಹಳ್ಳಿ ಕಸಬಾ ರೈತ ಸಂಪರ್ಕ ತೆರೆಯದಿರುವ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲರಿಗೆ ದೂರು ನೀಡಿದ್ದರು.
ಈ ದೂರನ್ನಾಧರಿಸಿ ಸಚಿವರು ಕೃಷಿ ನಿರ್ದೇಶಕರಿಗೆ ಈ ರೈತ ಸಂಪರ್ಕ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದ್ದರು. ಅದರಂತೆ ದೇವನಹಳ್ಳಿ ಕಸಬಾ ರೈತ ಸಂಪರ್ಕ ಕೇಂದ್ರಕ್ಕೆ ಕೃಷಿ ನಿರ್ದೇಶಕರಾದ ಶ್ರೀನಿವಾಸ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಎರಡು ದಿನಗಳಿಂದ ರೈತ ಸಂಪರ್ಕ ಕೇಂದ್ರ ತೆರೆಯದಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೃಷಿ ನಿರ್ದೇಶಕರು ಸಚಿವರಿಗೆ ಮಾಹಿತಿ ನೀಡಿದ್ದು, ರೈತ ಸಂಪರ್ಕ ಕೇಂದ್ರ ತೆರೆಯದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಆಯುಕ್ತರಿಗೆ ಸೂಚನೆ ನೀಡಿದ್ದರು.
ಕರ್ತವ್ಯ ಲೋಪ ಎಸಗಿದ ದೇವನಹಳ್ಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರೇವಪ್ಪ ಮನಗೂಳಿ, ಕೃಷಿ ಅಧಿಕಾರಿ ಅರುಣ ಎನ್. ಹಾಗೂ ಸಹಾಯಕ ಕೃಷಿ ಅಧಿಕಾರಿ ಶಿವಮೂರ್ತಿ ಬಿ.ಹೆಚ್ ಅವರನ್ನು ಅಮಾನತುಗೊಳಿಸಲಾಗಿದೆ.