ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಧೂಮಪಾನ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಒಂದು ವೇಳೆ ಅನಧಿಕೃತವಾಗಿ ಧೂಮಪಾನ ವಲಯಗಳಿದ್ದಲ್ಲಿ ಅಂತಹ ಕೇಂದ್ರಗಳ ಮೇಲೆ ದಾಳಿ ಮಾಡಿ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಟಿ.ನಾಗರಾಜ್ ಹೇಳಿದರು.
ಅಬಕಾರಿ ನಿರೀಕ್ಷಕರು, ಉಪ ನಿರೀಕ್ಷಕರು ಹಾಗೂ ಉಪ ಅಧೀಕ್ಷಕರುಗಳಿಗೆ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ-2003 ಮತ್ತು ತಂಬಾಕು ಮುಕ್ತ ದಾವಣಗೆರೆ ಮಾಡುವ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಾರ್, ರೆಸ್ಟೋರೆಂಟ್ಗಳಲ್ಲಿ ಕೋಟ್ಪಾ ಕಾಯ್ದೆಯ ಸೆಕ್ಷನ್ 4 ರಂತೆ ಧೂಮಪಾನ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಬಾರ್ , ರೆಸ್ಟೋರೆಂಟ್ಗಳನ್ನು ಸಂಪೂರ್ಣವಾಗಿ ಧೂಮಪಾನ ಮುಕ್ತ ಪ್ರದೇಶಗಳನ್ನಾಗಿ ಘೋಷಿಸಲಾಗಿದೆ ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಜಿ.ಡಿ ರಾಘವನ್ ಮಾತನಾಡಿ, ನಗರದ ಎಲ್ಲಾ ಬಾರ್ , ರೆಸ್ಟೋರೆಂಟ್ಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುತ್ತಿರುವವರ ಮೇಲೆ ಕ್ರಮ ಕೈಗೊಂಡು ಅಬಕಾರಿ ಇಲಾಖೆ, ಮಹಾನಗರಪಾಲಿಕೆ, ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಧೂಮಪಾನದ ವಲಯ ತೆರವುಗೊಳಿಸಲಾಗುವುದು ಎಂದು ತಿಳಸಿದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ, ಮಾಯ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಜಿತಿನ್ ಚಂದ್ರನ್, ಸಾಮಾಜಿಕ ಕಾರ್ಯಕರ್ತ ದೇವರಾಜ್ ಕೆ.ಪಿ ಕಾರ್ಯಕ್ರಮ ನಿರೂಪಸಿ, ವಂದನಾರ್ಪಣೆ ಮಾಡಿದರು. ಕಾರ್ಯಾಗಾರದಲ್ಲಿ ಜಿಲ್ಲೆಯ ಅಬಕಾರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು