ಡಿವಿಜಿ ಸುದ್ದಿ, ಬೆಂಗಳೂರು: ಗಲಭೆ ಸಂದರ್ಭದಲ್ಲಿ ನಮ್ಮ ಮನೆಗೆ ಬೆಂಕಿ ಇಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಡಿ.ಜೆ.ಹಳ್ಳಿ ಠಾಣೆಗೆ ದೂರು ನೀಡಿದರು.
ಇಂದು ಮಧ್ಯಾಹ್ನ ಠಾಣೆಗೆ ಬಂದ ಅವರು, ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅವರ ಜೊತೆ 25 ನಿಮಿಷ ಮಾತನಾಡಿದರು. ಘಟನೆ ಬಗ್ಗೆ ವಿವರಿಸಿ, ಲಿಖಿತವಾಗಿ ದೂರು ಕೂಡ ನೀಡಿದರು.

ಗಲಭೆ ನಂತರ ಶಾಸಕರು ಠಾಣೆಗೆ ಬಂದು ನೋಡಿರಲಿಲ್ಲ. ಆದರೆ, ಡಿ.ಜೆ.ಹಳ್ಳಿ ಠಾಣೆಯಲ್ಲಿ ಸುಟ್ಟ ಅವಶೇಷ ನೋಡಿ ಶಾಸಕರು ದಂಗಾದರು. ನನ್ನ ತಂದೆ ಕಟ್ಟಿದ್ದ ಹಾಗೂ ನಾನು ಆಡಿ ಬೆಳೆದ ಮನೆ ಸುಟ್ಟು ಕರಕಲಾಗಿದೆ. ತಾಯಿ ನೆನಪಿಗೆ ಇದ್ದ ತಾಳಿಯೂ ಕಾಣಿಸುತ್ತಿಲ್ಲ ಎಂದರು.

3 ಕೋಟಿಯಷ್ಟು ಹಾನಿಯಾಗಿದೆ. ಇಡೀ ಮನೆ ಸುಟ್ಟು ಹೋಗಿದೆ. ತಂದೆ-ತಾಯಿ ನಮ್ಮನ್ನು ಸಾಕಿದ ಮನೆಯನ್ನು ಈ ಸ್ಥಿತಿ ನೋಡಿ ದುಃಖವಾಗುತ್ತಿದೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ಬೇಕು ಹಾಗೂ ಗಲಭೆ ಸೃಷ್ಟಿಸಿರುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೇಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದರು.



