ಡಿವಿಜಿ ಸುದ್ದಿ, , ಶಿವಮೊಗ್ಗ: ಗ್ರಾಮ ಸಹಾಯಕಿಯೊಬ್ಬರಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಭದ್ರಾವತಿ ತಹಶೀಲ್ದಾರ್ ಎಚ್.ಸಿ.ಶಿವಕುಮಾರ್ ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಗ್ರಾಮ ಸಹಾಯಕಿ ಸಂಬಳ ಕೇಳಿದರೆ ತಹಶೀಲ್ದಾರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಭದ್ರಾವತಿ ತಹಶೀಲ್ದಾರ್ ಎಚ್.ಸಿ.ಶಿವಕುಮಾರ್ ವಿರುದ್ಧ ಗ್ರಾಮ ಸಹಾಯಕಿಯೊಬ್ಬರು ಈ ರೀತಿ ಆರೋಪ ಮಾಡಿದ್ದಾರೆ. ಈ ಆರೋಪ ಕೇಳಿ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಹಶೀಲ್ದಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ.

ಭದ್ರಾವತಿಯ ಸಿದ್ದಾಪುರ ಗ್ರಾಮ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಸಂಬಳ ನೀಡುವಂತೆ ತಹಶೀಲ್ದಾರ್ ಬಳಿ ಮನವಿ ಮಾಡಿಕೊಂಡಿದ್ದಾರೆ. ಲೈಂಗಿಕ ಕಿರುಕುಳ ನೀಡಿದ್ಧಾರೆ ಎಂದು ಆರೋಪಿಸಿದ್ದಾರೆ.
ಮಹಿಳೆ ಪತಿ ಕೂಡ ಇದೇ ಗ್ರಾಮದಲ್ಲಿ ಗ್ರಾಮ ಸಹಾಯಕರಾಗಿದ್ದರು. ಇವರಿಗೆ ಅನಾರೋಗ್ಯದ ಕಾರಣ ಸಂತ್ರಸ್ತೆಯ ಅಕ್ಕ ಆರಂಭದಲ್ಲಿ ಐದಾರು ತಿಂಗಳು ಕೆಲಸ ಮಾಡಿದರು. ಇದಾದ ಬಳಿಕ ಚೇತರಿಸಿಕೊಂಡ ಅವಿನಾಶ್ ಪುನಃ ಕೆಲಸಕ್ಕೆ ವಾಪಸ್ ಆಗಿದ್ದರು. ಆದರೆ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಕಾರಣ ಕಳೆದ ಐದು ತಿಂಗಳಿನಿಂದ ಮಹಿಳೆ ಕೆಲಸ ಮಾಡುತ್ತಿದ್ದರು.
ಈ ವೇಳೆ ನೊಂದ ಮಹಿಳೆಗೆ ಐದಾರು ತಿಂಗಳಿನಿಂದ ವೇತನ ಬಂದಿರಲಿಲ್ಲ. ಈ ಬಗ್ಗೆ ತಹಶೀಲ್ದಾರ್ ಅವರ ಬಳಿ ಮಹಿಳೆ ವೇತನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ನಾನು ಹೇಳಿದ ಸ್ಥಳಕ್ಕೆ ಬಂದರೆ ವೇತನ ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ ಎಂದು ಮಹಿಳೆ ಆರೋಪಿಸಿದ್ದು, ಈ ಬಗ್ಗೆ ತಹಶೀಲ್ದಾರ್ ವಿರುದ್ಧ ಹಳೆನಗರ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ.
ಇದೀಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಹಶೀಲ್ದಾರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಆದರೆ ತಹಶೀಲ್ದಾರ್ ಶಿವಕುಮಾರ್ನನ್ನು ಕೇವಲ ಕರ್ತವ್ಯದಿಂದ ಮಾತ್ರವಲ್ಲದೇ, ಕೆಲಸದಿಂದಲೇ ಅಮಾನತು ಮಾಡಿ, ಬಂಧನ ಮಾಡುವಂತೆ ಆಗ್ರಹಿಸಿದ್ದಾರೆ.



