ಡಿವಿಜಿ ಸುದ್ದಿ, ಬೆಂಗಳೂರು: ಪಾದರಾಯನಪುರ ಗಲಭೆಗೆ ಶಾಸಕ ಜಮೀರ್ ಅಹಮದ್ ಮುಖ್ಯ ಕಾರಣವಾಗಿದ್ದು, ಅವರ ವಿರುದ್ಧ ಗೂಂಡಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪಕ್ಷದ ನಿಯೋಗದ ಈ ಬೇಡಿಕೆ ಮುಂದಿಟ್ಟಿಡಲಾಗಿದೆ. ಕೊರೊನಾ ಮಹಾಮಾರಿ ಸೋಂಕಿ ಹರಡುತ್ತಿರುವ ಈ ಸಂದರ್ಭದಲ್ಲಿ ಪಾದರಾಯನಪುರ ಗಲಾಟೆ ಅಕ್ಷಮ್ಯ ಅಪರಾಧ. ಗಲಭೆಕೋರರನ್ನು ಸರ್ಕಾರ ಈಗಾಗಲೇ ಬಂಧಿಸಿದೆ. ಆದರೆ, ಗಲಭೆಗೆ ಮುಖ್ಯ ಕಾರಣವಾಗಿರುವ ಜಮೀರ್ ಅಹಮದ್ ಮೇಲೆ ಗೂಂಡಾ ಕಾಯ್ದೆ ಅಡಿ ಬಂಧಿಸಬೇಕು ಎಂದು ಒತ್ತಾಯಿಸಿದರು.
ಕೊರೊನಾ ತಡೆಯುವ ನಿಟ್ಟಿನಲ್ಲಿ ಲಾಕ್ಡೌನ್ ಮತ್ತು ಸೀಲ್ಡೌನ್ ವಿಧಿಸಿರುವ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಸೇವೆಯಲ್ಲಿ ತೊಡಗಿರುವವರ ಬಗ್ಗೆಯೂ ಸರ್ಕಾರ ಹೆಚ್ಚಿನ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದ್ದೇವೆ ಎಂದರು.
ಇನ್ನು ಶಾಲೆಗಳ ಮಧ್ಯಂತರ ರಜೆ ರದ್ದುಪಡಿಸಬೇಕು. ಖಾಸಗಿ ಶಾಲೆಗಳು ಶುಲ್ಕ ಕಟ್ಟುವಂತೆ ಒತ್ತಾಯಿಸದಂತೆ ಕ್ರಮ ತೆಗೆದುಕೊಳ್ಳಬೇಕು. ನರೇಗಾ ಯೋಜನೆಯಡಿ ಉದ್ಯೋಗ ಅವಕಾಶ ಹೆಚ್ಚಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಆಕ್ಟಿವ್ ಆಗಿ ಕೆಲಸ ಮಾಡುವಂತೆ ನೋಡಿಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.



