ಡಿವಿಜಿ ಸುದ್ದಿ, ಮಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟವರ ಮನೆಗೆ ಭೇಟಿ ನೀಡಲು ಬಂದಿದ್ದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ಬಜ್ಪೆ ವಿಮಾನ ನಿಲ್ದಾಣದಲ್ಲಿಯೇ ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್, ಬಸವರಾಜ ರಾಯರೆಡ್ಡಿ, ಉಗ್ರಪ್ಪ, ಎಂ.ಬಿ,ಪಾಟೀಲ್, ಮಾಜಿ ಸಚಿವ ಸೀತಾರಾಮ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಹೈಡ್ರಾಮಾ ಸೃಷ್ಟಿಯಾಗಿತ್ತು.

ಮೃತಪಟ್ಟ ಇಬ್ಬರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲು ಮಂಗಳೂರಿಗೆ ಕಾಂಗ್ರೆಸ್ ಮುಖಂಡರು ಆಗಮಿಸಿದ್ದರು. ಆಗ ಪೊಲೀಸರು ವಿಮಾನ ನಿಲ್ದಾಣದಿಂದಲೇ ಬೆಂಗಳೂರಿಗೆ ವಾಪಸ್ ಕಳುಹಿಸಲು ಪ್ರಯತ್ನಿಸಿದರು. ಆದರೆ, ಕಾಂಗ್ರೆಸ್ ಮುಖಂಡರು ವಾಪಸ್ ಹೋಗಲು ನಿರಾಕರಿಸಿದ್ದರಿಂದ ಪೊಲೀಸರು ವಶಕ್ಕೆ ಪಡೆದರು.
ನಾವು ಕಾನೂನುಬಾಹಿರ ಕೆಲಸವನ್ನು ಮಾಡಲು ಬಂದಿಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೇವೆ. ನೀವು ನಮ್ಮನ್ನು ಬಂಧಿಸಬಾರದು ಎಂದು ಗಲಾಟೆ ಮಾಡಿದ್ದಾರೆ. ಈವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ಉಂಟಾಯಿತು. ಪೊಲೀಸರು ಕಾಂಗ್ರೆಸ್ ನಾಯಕರನ್ನು ತಮ್ಮ ಜೀಪ್ನಲ್ಲಿ ಪೊಲೀಸ್ ಠಾಣೆಗೆ ಕರೆದಕೊಂಡು ಹೋದರು.



