ಡಿವಿಜಿ ಸುದ್ದಿ, ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು 8ರಿಂದ 10 ದಿನ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಕಳೆದ ಮೂರ್ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿದವರೆಲ್ಲರೂ ಕ್ವಾರಂಟೈನ್ ಗೆ ಒಳಗಾಗಬೇಕಾಗಿದೆ. ಕಳೆದ ವಾರದಿಂದ ಹಲವು ಕಾರ್ಯಕ್ರಮಗಳಲ್ಲಿ ಯಡಿಯೂರಪ್ಪನವರ ಜೊತೆ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲಾಗುತ್ತಿದೆ. ಮುಖ್ಯಮಂತ್ರಿಗಳಿಗೆ ಸ್ವಲ್ಪ ಕಫ ಇದೆ, ಬೇರೆ ಹೃದಯದ ಸಮಸ್ಯೆಯೇನು ಕಂಡುಬಂದಿಲ್ಲ ಎಂದಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಅಲ್ಲಿಯವರೆಗೆ ಸ್ವಯಂ ಕ್ವಾರಂಟೈನ್ ಗೆ ಒಳಗಾಗುವುದು ಉತ್ತಮ. ಇತ್ತೀಚೆಗೆ ಕಾರ್ಯಕ್ರಮಗಳಲ್ಲಿ ಅವರ ಸಂಪರ್ಕಕ್ಕೆ ಬಂದವರು ಕೂಡ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಇತ್ತೀಚೆಗೆ ಮುಖ್ಯಮಂತ್ರಿಗಳು ರಾಜ್ಯಪಾಲ ವಜುಭಾಯಿ ವಾಲಾ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ಅವರು ಸಹ ಕೊರೋನಾ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೈನ್ ಆದರೆ ಉತ್ತಮ ಎಂದು ಸಚಿವ ಸುಧಾಕರ್ ಹೇಳಿದರು.



