ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರದಿಂದ ಇನ್ನುಮುಂದೆ ಯಾವುದೇ ಸಮುದಾಯಕ್ಕೆ ಕೊರೊನಾ ಪರಿಹಾರ ಘೋಷಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂ ಅವರ 56ನೇ ಪುಣ್ಯತಿಥಿ ಹಿನ್ನೆಲೆ ನೆಹರೂ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಸಮುದಾಯಗಳಿಗೆ ಪರಿಹಾರ ಘೋಷಣೆ ಮಾಡಿದೆ. ಇನ್ಮುಂದೆ ಘೋಷಣೆ ಮಾಡಿದ ಹಣ ತಲುಪಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ. ಈಗಾಗಲೇ ನನ್ನ ಶಕ್ತಿ ಮೀರಿ ಪ್ಯಾಕೇಜ್ ಘೋಷಣೆ ಮಾಡಿದ್ದೇನೆ. ಹೀಗಾಗಿ ಮುಂದೆ ಯಾವುದೇ ಸಮುದಾಯಕ್ಕೆ ಪರಿಹಾರ ಘೋಷಣೆ ಮಾಡುವುದಿಲ್ಲ ಎಂದು ತಿಳಿಸಿದರು.
ದೇವಸ್ಥಾನಗಳನ್ನು ತೆರೆಯಲು ಅನುಮತಿ ಕೊಟ್ಟಿದ್ದೇವೆ. ಇದರೊಂದಿಗೆ ಮಸೀದಿ, ಚರ್ಚ್ ಗಳಿಗೂ ಅವಕಾಶ ಕೊಡಲಾಗುತ್ತದೆ. ಈ ಸಂಬಂಧ ಕೇಂದ್ರ ಸರ್ಕಾರದಿಂದ ಅನುಮತಿ ಸಿಗಬೇಕು. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಕೆಲವು ನಿಬಂಧನೆಗಳನ್ನು ಅಳವಡಿಸಲು ಸಲಹೆ ಕೊಟ್ಟಿದ್ದಾರೆ. ಅದನ್ನು ಅನುಸರಿಸಲಾಗುತ್ತದೆ. ನಾವು ಕೋವಿಡ್-19 ಜೊತೆ ಜೊತೆಗೆ ಬದುಕಬೇಕಬೇಕಿದೆ ಎಂದರು.



