ರೋಮ್: ಭಾರತೀಯರು ಲಾಕ್ಡೌನ್ ನಿಯಮ ಪಾಲನೆ ಮಾಡಿ, ಇಲ್ಲದಿದ್ದರೆ ಅನಾಹುತ ಗ್ಯಾರಂಟಿ. ಇಟಲಿಯಲ್ಲೂ ಕೊರೊನಾ ಸೋಂಕು ಪತ್ತೆಯಾದ ತಕ್ಷಣ ಲಾಕ್ಡೌನ್ ಹೇರಿತ್ತು. ಆದರೆ, ಅಲ್ಲಿನ ಜನ ಲಾಕ್ಡೌನ್ ಮೀರಿ ಊರೆಲ್ಲ ಸುತ್ತಾಡಿದರು. ಈಗ ಲಾಕ್ಡೌನ್ ಮೀರಿದ್ದಕ್ಕೆ ಇಟಲಿಯಲ್ಲಿ ಅತ್ಯಧಿಕ ಸಾವು ಸಂಭವಿಸಿದೆ ಎಂದು ಇಟಲಿಯಿಂದ ಕನ್ನಡತಿ ಭಾರತೀಯರಿಗೆ ವಿಡಿಯೋ ಸಂದೇಶ ರವಾನಿಸಿದ್ದಾರೆ.
ನಮ್ಮ ರಾಜ್ಯದ ಮೈಸೂರು ಜಿಲ್ಲೆಯವರಾದ ಅನುಶ್ರೀ ಇಟಲಿಯಲ್ಲಿ ನೆಲೆಸಿದ್ದು, ಅಲ್ಲಿಂದಲೇ ವಿಡಿಯೋ ಮೂಲಕ ಜನರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ಕೊರೊನಾ ವೈರಸ್ ಜಗತ್ತಿನಾದ್ಯಂತ ವ್ಯಾಪಿಸಿದೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗಾಗಲೇ ಸಾವಿರಾರು ಜನರು ಜೀವ ಕಳೆದುಕೊಂಡಿದ್ದಾರೆ. ಇನ್ನೂ ಸಾವಿರಾರು ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅದರಲ್ಲಿ ಇಟಲಿ ಕೂಡ ಅಧಿಕ ಜನರು ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ ಇಲ್ಲಿವರೆಗೆ 6 ಸಾವಿರಕ್ಕೂ ಅಧಿಕ ಜನರಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.
ಮೊದಲಿಗೆ ಇಟಲಿಯ ಮಿಲನ್ನಲ್ಲಿ ಕೊರೊನಾ ವೈರಸ್ ಕಂಡು ಬಂದಿತ್ತು. ಕೊರೊನಾ ವೈರಸ್ ಪತ್ತೆಯಾದ ಒಂದೇ ವಾರಕ್ಕೆ ಇಟಲಿ ಸರ್ಕಾರ ಲಾಕ್ಡೌನ್ ಮಾಡಿತ್ತು. ಆದರೆ ಜನರು ಸರ್ಕಾರ ಮಾಡಿದ ನಿಯಮವನ್ನು ಪಾಲಿಸದೇ ಮನೆಯಿಂದ ಹೊರಗಡೆ ಓಡಾಡಲು ಶುರು ಮಾಡಿದರು. ಬೇರೆ ಬೇರೆ ಊರಿಗಳಿಗೆ ಓಡಾಡಲು ಶುರು ಮಾಡಿದರು. ಇದರಿಂದ ಇಡೀ ಇಟಲಿ ದೇಶಾದ್ಯಂತ ವೈರಸ್ ವ್ಯಾಪಿಸಿದ್ದು, ಈಗ ಇಟಲಿ ಸಂಪೂರ್ಣ ಲಾಕ್ಡೌನ್ ಆಗಿದೆ.ನಾನು ಫೆ.23ರಂದು ಕೊನೆಯ ಬಾರಿಗೆ ಆಫಿಸ್ಗೆ ಹೋಗಿದ್ದೆ. ಸುಮಾರು ಒಂದು ತಿಂಗಳಾಯಿತು. ನಾನು ಮನೆಯಲ್ಲಿಯೇ ಇದ್ದೇನೆ, ಹೊರಗಡೆ ಹೋಗಿಲ್ಲ. ಆದರೆ ನಮ್ಮ ಜೀವನ ಕಷ್ಟವಾಗಿಲ್ಲ.
ಎರಡು ವಾರಕ್ಕೊಮ್ಮೆ ಮನೆಯಿಂದ ಒಬ್ಬರು ಮಾತ್ರ ಹೊರಗೆ ಹೋಗಿ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ನಮಗೆ ಯಾವುದೇ ಸಮಸ್ಯೆಯಾಗುತ್ತಿಲ್ಲ.ಇಟಲಿಯಲ್ಲಿ ಎರಡನೇ ವಾರ ಕೊರೊನಾ ವೈರಸ್ ಇದ್ದಾಗ 245 ಪ್ರಕರಣ ಇತ್ತು. ಈಗ ಇದೇ ಪರಿಸ್ಥಿತಿಯಲ್ಲಿ ನಮ್ಮ ಭಾರತ ಕೂಡ ಇದೆ.
ಭಾರತಕ್ಕೆ ಕೊರೊನಾ ವೈರಸ್ ಬಂದು 2 ವಾರ ಆಗಿದೆ. ಇಲ್ಲಿಯವರೆಗೂ 511 ಪಾಸಿಟಿವ್ ಪ್ರಕರಣ ಆಗಿದೆ. ಹೀಗಾಗಿ ದಯವಿಟ್ಟು ಎಲ್ಲರೂ ಮನೆಯಲ್ಲಿರಿ. ಹೊರಗೆ ಬರಬೇಡಿ, ಎಲ್ಲೂ ಹೋಗಬೇಡಿ. ನಮ್ಮ ಭಾರತ ಇನ್ನೊಂದು ಇಟಲಿ ಆಗುವುದು ಬೇಡ. ಇಟಲಿ ಸಣ್ಣ ದೇಶ ಸುಮಾರು 6.5 ಕೋಟಿ ಜನಸಂಖ್ಯೆ ಇದೆ. ನಮ್ಮ ಕರ್ನಾಟಕದಷ್ಟೂ ಇಲ್ಲ. ನಮ್ಮ ಇಂಡಿಯಾದಲ್ಲಿ 1.3 ಬಿಲಿಯನ್ ಜನಸಂಖ್ಯೆ ಇದೆ. ದಯವಿಟ್ಟು ಯೋಚನೆ ಮಾಡಿ ನಮ್ಮಿಂದ ನಮ್ಮ ದೇಶದ ಜನರಿಗೆ ಎಫೆಕ್ಟ್ ಆಗುವುದು ಬೇಡ. ಸುಮ್ಮನೆ ಬೇರೆ ಕಡೆಗೆ ಪ್ರಯಾಣ ಮಾಡಬೇಡಿ. ಭಾರತದಲ್ಲಿ ಇನ್ನೂ ಹೆಚ್ಚಾಗಿ ಕೊರೊನಾ ವೈರಸ್ ಆಗುವುದು ಬೇಡ. ಯಾರೂ ಪ್ರಯಾಣ ಮಾಡಬೇಡಿ. ಮನೆಯಲ್ಲಿರಿ ಎಂದು ಅನುಶ್ರೀ ಮನವಿ ಮಾಡಿಕೊಂಡಿದ್ದಾರೆ.



