ಹೈದರಾಬಾದ್: ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ಶ್ರೀನಿವಾಸ ದೀಕ್ಷಿತಲು ಅವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ಧಾರೆ.
73 ವರ್ಷದ ದೀಕ್ಷಿತಲು ಅವರನ್ನು ಅನಾರೋಗ್ಯದ ಸಮಸ್ಯೆಯಿಂದ ಗುರುವಾರ ತಿರುಪತಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜು.19ರ ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದೀಕ್ಷಿತಲು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಸಂದರ್ಭದಲ್ಲಿ ಕೊರೊನಾ ಟೆಸ್ಟ್ ಮಾಡಲಾಗಿದ್ದು, ವರದಿ ಪಾಸಿಟಿವ್ ಎಂದು ದೃಢಪಟ್ಟಿತ್ತು.
ತಿಮ್ಮನ ದೇವಸ್ಥಾನದ 140 ಮಂದಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಉಳಿದಂತೆ ಲಡ್ಡು ಮಾಡುವ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 14 ಮಂದಿ ಸಹಾಯಕ ಅರ್ಚಕರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 140 ಮಂದಿ ಸೋಂಕಿತರಲಲ್ಲಿ 70 ಮಂದಿ ಚೇತರಿಕೆ ಕಂಡಿದ್ದಾರೆ. ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಟಿಟಿಡಿ ಭಕ್ತರಿಗೆ ದರ್ಶನ ವ್ಯವಸ್ಥೆಯನ್ನು ಮುಂದುವರಿಸಿದ್ದು, ಪ್ರತಿದಿನ ಸುಮಾರು 12 ಸಾವಿರ ಮಂದಿ ದೇವರ ದರ್ಶನ ಪಡೆಯುತ್ತಿದ್ದಾರೆ



