ಡಿವಿಜಿ ಸುದ್ದಿ, ಬೆಂಗಳೂರು:ಕೊರೊನಾ ವೈರಸ್ನಿಂದಾಗಿ ಬಡವರಿಗೆ ತೊಂದರೆ ಆಗದಂತೆ ತಡೆಯಲು ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಕೊರೊನಾ ವೈರಸ್ ತಡೆಯಲು ಕೇಂದ್ರ ಸರ್ಕಾರ ಮಾರ್ಗ ಸೂಚಿಯಂತೆ ಮಾ. 31 ವರೆಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಬಡವರಿಗೆ ಹೊರೆ ಆಗದಂತೆ ತಡೆಯಲು 2 ತಿಂಗಳ ಪಡಿತರ ಮುಂಚಿತವಾಗಿ ಕೊಡುತ್ತಿದ್ದೇವೆ. 13.20 ಕೋಟಿ ರೂ ಬಡವರ ಬಂಧು ಸಾಲ ಮನ್ನಾ ಮಾಡಲಾಗುವುದು. ಸಾಮಾಜಿಕ ಭದ್ರತಾ ಪಿಂಚಣಿ ಮುಂಗಡವಾಗಿ ಕೊಡುತ್ತೇವೆ. ಇದಲ್ಲದೆ ನರೇಗಾ ಕೂಲಿಕಾರರಿಗೆ ಎರಡು ತಿಂಗಳ ಮುಂಗಡ ಹಣ ನೀಡಲಾಗುವುದು ಎಂದು ಭರವಸೆ ನೀಡಿದರು.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಶಕ್ತಿ ಮೀರಿ ಶ್ರಮಿಸುತ್ತಿದೆ. ದೇಶದಲ್ಲಿ ಮೊದಲ ಸಾವು ಕರ್ನಾಟಕದಲ್ಲೇ ಆಗಿದ್ದರೂ ಸೋಂಕು ಹರಡದಂತೆ ತಡೆದಿದ್ದೇವೆ. ನಮ್ಮ ಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಜನರು ಇಂತಹ ಪರಿಸ್ಥಿತಿಯಿಂದ ಬಹುಬೇಗ ಗುಣಮುಖರಾಗಿ ಹೊರಬರುತ್ತಾರೆ ಎಂಬ ವಿಶ್ವಾಸ ನನಗಿದೆ. ಇಂತಹ ಸಂದರ್ಭದಲ್ಲಿ ವಿಪಕ್ಷಗಳ ಸಹಕಾರ ಬೇಕಿತ್ತು. ಅವರು ಸದನದಿಂದ ಹೊರಗಿರುವುದು ನೋವಿನ ಸಂಗತಿ ಎಂದರು.
ನಾನು ಹಸಿರು ಟವಲ್ ಹಾಕಿ ಕೃಷಿ ಬಜೆಟ್ ಮಂಡಿಸಿ, ಕೇಸರಿ ಶಾಲು ಹಾಕಿ ಹೊರಗೆ ಓಡಾಡ್ತೀನಿ ಎಂದು ಟೀಕೆ ಮಾಡಿದ್ದಾರೆ. ಕೇಸರಿ ತ್ಯಾಗದ ಸಂಕೇತ ಎನ್ನುವುದು ಅವರಿಗೆ ಗೊತ್ತಿರಲಿ ಎಂದು ಸಿಎಂ ತಿಳಿಸಿದರು.



