ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ಸಂಕಷ್ಟ ಸಮಯದಲ್ಲಿ ಯುದ್ಧಭೂಮಿಯಲ್ಲಿನ ಸೈನಿಕರಂತೆ ಪೊಲೀಸರು ಕೆಲಸ ಮಾಡಿದ್ದು, ಇಂತಹ ಪರಿಸ್ಥಿತಿ ಜನರ ಬೆಂಬಲದಿಂದ ನಮ್ಮ ಮನೋಬಲ ಇನ್ನಷ್ಟು ಹೆಚ್ಚಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಡಾ. ಅಮರ್ಕುಮಾರ್ ಪಾಂಡೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾದಂತಹ ಸಂದರ್ಭದಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಗೆ ನೀಡಿರುವ ಬೆಂಬಲದಿಂದ ನಮ್ಮ ಶಕ್ತಿ ಹೆಚ್ಚಿದೆ. ಸಂಕಷ್ಟ ಸಮಯದಲ್ಲಿ ಪರಿಸ್ಥಿತಿ ಕಷ್ಟವಾದರೂ ಉತ್ತಮವಾಗಿ ನಿಭಾಯಿಸುತ್ತಿದ್ದೇವೆ ಎಂದು ತಿಳಿಸಿದರು.
ಕೆಲ ಪೊಲೀಸ್ ಸಿಬ್ಬಂದಿಗೂ ಕೊರೊನಾ ಸೋಂಕು ತಗುಲಿರುವುದರಿಂದ ಪೊಲೀಸ್ ಸಿಬ್ಬಂದಿಯ ಕುಟುಂಬದವರಲ್ಲಿ ಆತಂಕ ನಿವಾರಿಸಲು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಪೊಲೀಸರು ಹಾಗೂ ಕುಟುಂಬದವರ ಜೊತೆ ಸಂವಾದ ನಡೆಸಿ ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.

ಹಲವು ಜಿಲ್ಲೆಗಳಿಗೆ ಭೇಟಿ ಕೊರೊನಾ ಪರಿಸ್ಥಿತಿ ಅವಲೋಕಿಸಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಪೊಲೀಸರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಂಟೈನ್ಮೆಂಟ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಜಿಲ್ಲೆಯಲ್ಲಿ ಸರಗಳ್ಳತನ ಹೆಚ್ಚಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ ಕಳವು ಪ್ರಕರಣಗಳಿಗೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು.
ದಾವಣಗೆರೆ ತಾಲ್ಲೂಕಿನ ನಾಗರಕಟ್ಟೆ ಯುವಕನನ್ನು ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ ಗುಡ್ಡದಲ್ಲಿ ನಡೆದ ಪ್ರಕರಣ ಭೇದಿಸಿದ ಶ್ವಾನದಳದ ಡಾಬರ್ಮನ್ ಜಾತಿಯ ತುಂಗಾಗೆ ಬಹುಮಾನ ನೀಡುವುದಾಗಿ ಘೋಷಿಸಿದರು. 11 ಕಿ.ಮೀ. ದೂರದವರೆಗೂ ಓಡಾಡಿ ಕೊಲೆ ಆರೋಪಿ ಪತ್ತೆಗೆ ಸಹಕರಿಸಿದ ಶ್ವಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್ ಇದ್ದರು.



