ಡಿವಿಜಿ ಸುದ್ದಿ, ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿರುವ ಪೌರತ್ವ ನೋಂದಣಿ (ಎನ್ಆಸಿ) ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಿಂಪಡೆಯಬೇಕೆಂದು ದಾವಣಗೆರೆ ಮುಸ್ಲಿಂ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಮುಸ್ಲಿಂ ಸಮುದಾಯ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾಯ್ದೆ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಮೂಲಕ ರಾಷ್ಟ್ರಪತಿಗೆ ಮನವಿ ನೀಡಿದರು.

ಪೌರತ್ವ ತಿದ್ದುಪಡಿ ಕಾಯ್ದೆ ದೇಶದಾದ್ಯಂತ ತೀವ್ರ ವಿವಾದವನ್ನುಂಟು ಮಾಡಿದೆ. ದೇಶದಲ್ಲಿ ಅಶಾಂತಿ ಸೃಷ್ಟಿಸಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಧರ್ಮದ ಆಧಾರದ ಮೇಲೆ ವಿಭಜನೆ ಮಾಡಿ ಸೌಹಾರ್ದತೆ, ಸಾಮರಸ್ಯ ನಾಶ ಮಾಡುವ ಉದ್ಧೇಶವನ್ನು ನೂತನ ಕಾಯ್ದೆಗಳು ಒಳಗೊಂಡಿದೆ. ಹೀಗಾಗಿ ಈ ಕಾಯ್ದೆ ಹಿಂಪಡೆಯಬೇಕು ಎಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಂಎಲ್ ಸಿ ಅಬ್ದುಲ್ ಜಬ್ಬಾರ್, ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್, ಮುಸ್ಲಿಂ ಮುಖಂಡರಾದ ಸೈಯದ್ ಸೈಫುಲ್ಲಾ ಸಾಬ್, ಜೆ.ಅಮಾನುಲ್ಲಾ ಖಾನ್, ರಜ್ಜಿ ಖಾನ್, ಸಾಧಿಕ್ ಪೈಲ್ವಾನ್, ಹನೀಫ್ ಮೌಲಾನಾ, ರಷೀದ್ ಖಾನ್ , ಮೊಹ್ಮದ್ ಸಿರಾಜ್, ಅಯೂಬ್ ಪೈಲ್ವಾನ್, ಪಾಲಿಕೆ ಸದಸ್ಯರಾದ ಕೆ. ಚಮನ್ ಸಾಬ್, ರಹೀಮ್ ಸಾಬ್ , ಸಯೀದ್ ಚಾರ್ಲಿ, ಅಬ್ದುಲ್ ಅತೀಫ್, ಕಬೀರ್ ಖಾನ್, ಜಾಕಿರ್ ಆಲಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.



