ಡಿವಿಜಿ ಸುದ್ದಿ, ದಾವಣಗೆರೆ: ಕಳೆದ 18 ದಿನದಿಂದ ಸತತವಾಗಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ನಗರದ ಎಲ್ಲಾ ಪೆಟ್ರೋಲ್ ಬಂಕ್ ಗಳ ಮುಂದೆ ಒಂದೇ ಬಾರಿಗೆ ಪ್ರತಿಭಟನೆ ನಡೆಸಿದರು.
ಸತತವಾಗಿ ಇಂಧನ ಬೆಲೆ ಏರಿಕೆ ಆಗುತ್ತಿದ್ದರೂ, ಕೇಂದ್ರ ಸರ್ಕಾರ ನಿಯಂತ್ರಣಕ್ಕೆ ತರುತ್ತಿಲ್ಲ. ಕೇಂದ್ರ ಸರ್ಕಾರ ಜನ ಸಾಮಾನ್ಯರ ಮೇಲೆ ಅನಗತ್ಯವಾಗಿ ಹೊರೆ ಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಕ್ಷ್ಮಿ ಫ್ಲೋರ್ ಮಿಲ್ ಮುಂಭಾಗದ ಪೆಟ್ರೋಲ್ ಬಂಕ್ ನಲ್ಲಿ ಎಸ್ಸಿ ಘಟಕದ ಸಹಯೋಗದೊಂದಿಗೆ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶವಸಂಸ್ಕಾರದ ಅಣಕು ಪ್ರದರ್ಶಿಸಿದರು. ಜಿಲ್ಲಾ ಕಾಂಗ್ರೆಸ್ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ನಗರದ 25ಕ್ಕೂ ಹೆಚ್ಚು ಬಂಕುಗಳ ಮುಂದೆ ಪ್ರತಿಭಟನೆ ನಡೆಸಿದರು.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಇದರಿಂದ ಜನಸಾಮಾನ್ಯರ ಜೀವನ ನಡೆಸುವುದು ಕಷ್ಟವಾಗಿದೆ. ಜನರ ನೆರವಿಗೆ ಬಾರಬೇಕಾದ ಕೇಂದ್ರ ಸರ್ಕಾರ, ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಬಿ ಮಂಜಪ್ಪ ಟೀಕಿಸಿದರು.



