ಡಿವಿಜಿ ಸುದ್ದಿ, ದಾವಣಗೆರೆ: ಅನರ್ಹರ ಪರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿರುವ ಆಡಿಯೋ ವೈರಲ್ ಆಗಿರುವ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಪಕ್ಷದ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಯಡಿಯೂರಪ್ಪ ಮತ್ತು ಅಮೀತ್ ಷಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಹೆಚ್.ಬಿ. ಮಂಜಪ್ಪ, ಅನರ್ಹ ಶಾಸಕರ ತ್ಯಾಗದಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿರುವ ಆಡಿಯೋ ವೈರಲ್ ಆಗಿದೆ. ಆ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಅವರು ಅನರ್ಹರಿಗೂ ನಮಗೂ ಸಬಂಧವಿಲ್ಲ ಅಂತಾ ಹೇಳಿಕೆ ನೀಡುತ್ತಿದ್ದಾರೆ. ಆ ವಿಡಿಯೋದಲ್ಲಿ ಸಿಎಂ ಯಡಿಯೂರಪ್ಪ ಅವರೇ ಅನರ್ಹ ಶಾಸಕಕ ತ್ಯಾಗದಿಂದ ನಮ್ಮ ಸರ್ಕಾರ ಬಂದಿದೆ. ಅವರಿಗೆ ನ್ಯಾಯ ಒದಗಿಸಬೇಕಿರುವುದು ಹೇಳಿದ್ದಾರೆ ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸತ್ಯ ಹರಿಶ್ಚಂದ್ರರಾ ಎಂದು ಹೇಳುವ ಬಿಜೆಪಿಯವರೇನು ಸತ್ಯ ಹರಿಶ್ಚಂದ್ರರೇ ಎಂದು ಕಿಡಿಕಾರಿದರು. ಸಚಿವರಾದ ಆರ್. ಅಶೋಕ ಎಂಟಿಬಿ ನಾಗರಾಜ್ ಅವರನ್ನು ಕರೆದುಕೊಂಡು ಹೋಗಿ ವಿಶೇಷ ವಿಮಾನದಲ್ಲಿ ಹತ್ತಿಸುತ್ತಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಗೊತ್ತಾಗುವುದಿಲ್ಲವೆಂಬಂತೆ ಬಿಜೆಪಿಯವರು ವರ್ತಿಸುತ್ತಿದ್ದಾರೆ. ಬಿಜೆಪಿಯವರು ಅಧಿಕಾರಕ್ಕಾಗಿ ಮಾಡಿರುವ ಕುತಂತ್ರ. ಸ್ಥಿರವಾಗಿದ್ದ ಸಮ್ಮಿಶ್ರ ಸರ್ಕಾರವನ್ನು ಕೆಡವಲು ಹಣದ ಆಮಿಷವೊಡ್ಡಿ ಅನರ್ಹ ಶಾಸಕರಿಗೆ ರಾಜೀನಾಮೆ ಕೊಡುವಂತೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಮೂಲಕ ಯಡಿಯೂರಪ್ಪನವರು ಹಿಂಬಾಗಿಲಿನಿಂದ ಅಧಿಕಾರ ಹಿಡಿದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಯಡಿಯೂರಪ್ಪನವರ ಆಡಿಯೋವನ್ನು ರಾಜ್ಯಪಾಲರು, ಸುಪ್ರೀಂ ಕೋರ್ಟ್ ಗೆ ಕಳಹಿಸಲಾಗುವುದು. ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದರು.
ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಜಯ
ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಾಯಕತ್ವದಲ್ಲಿ ಈ ಬಾರಿ ನಗರ ಪಾಲಿಕೆಯ ಆಡಳಿತ ಚುಕ್ಕಾಣಿಯನ್ನು ಜಿಲ್ಲಾ ಕಾಂಗ್ರೆಸ್ ಹಿಡಿಯಲಿದೆ. ಹಿಂದೆ 39 ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಆಯ್ಕೆಯಾಗಿದ್ದರು. ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿದ್ದು, ಈ ಕಾಂಗ್ರೆಸ್ 40 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿಯಲಿದೆ. ಎಲ್ಲೆಲ್ಲಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಗಳಿದ್ದರೂ, ಅಂತಹವರಿಗೆ ಮನವೊಲಿಸಿ ಪಕ್ಷದ ಬೆಂಬಲಿಸುವಂತೆ ಮನವಿ ಮಾಡಲಾಗುವುದು. ಒಂದು ವೇಳೆ ಬಂಡಾಯ ಅಭ್ಯರ್ಥಿಗಳು ವಾಪಸ್ಸು ತಗೆದುಕೊಳ್ಳದಿದ್ದರೆ, ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್, ಎ. ನಾಗರಾಜ್, ಮಾಗನಹಳ್ಳಿ ಪರಶುರಾಮ್, ಸೈಯದ್ ಖಾಲಿದ್, ಮೈನುದ್ದೀನ್, ಸೋಮಲಾಪುರ ಹನುಮಂತಪ್ಪ, ರುದ್ರೇಶ್, ನಂಜಾನಾಯ್ಕ, ಮಂಜುನಾಥ್, ದ್ರಾಕ್ಷಾಯಿಣಮ್ಮ, ಶುಭಮಂಗಳ, ರಾಧಾ ಬಾಯಿ, ಜಗದೀಶ್, ಹಲಗೇರಿ ಮಂಜಪ್ಪ ಸೇರಿದಂತೆ ಇತರರು ಇದ್ದರು.
.