ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದು, ಇದಕ್ಕಾಗಿ ಹಗಲಿರುಳು ಶ್ರಮಿಸಿದ ಪ್ರತಿಯೊಬ್ಬ ಅಧಿಕಾರಿಗಳಿಗೂ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.
ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಕೋವಿಡ್-19 ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿರುವ ಸಮಯದಲ್ಲಿ ಜವಾಬ್ದಾರಿ ಹೆಚ್ಚಿದೆ. ಅಧಿಕಾರಿಗಳು ವಿಶೇಷವಾಗಿ ಜಾಗೃತರಾಗುವ ಮೂಲಕ ಕೆಲಸ ಮಾಡಬೇಕು ಎಂದರು.
ಗ್ರೀನ್ ಜೋನ್ಲ್ಲಿದ್ದ ಜಿಲ್ಲೆಯಲ್ಲಿ ಒಂದೇ ಬಾರಿಗೆ ಕೊರೊನಾ ಪ್ರಕರಣಗಳು ಏರಿಕೆ ಕಂಡು ಬಂದವು. ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲರೂ ತುಂಬಾ ಸಕ್ರಿಯವಾಗಿ ಕೆಲಸ ಮಾಡಿ ಮತ್ತೆ ಜಿಲ್ಲೆಯನ್ನು ಗ್ರೀನ್ ಜೋನ್ ತರಲು ಶ್ರಮಿಸಬೇಕು ಎಂದರು.
ಜಿಲ್ಲೆಯಲ್ಲಿ 14 ಜನ ಇನ್ಸಿಡೆಂಟ್ ಕಮಾಂಡರ್ಗಳನ್ನು ಕಂಟೈನ್ಮೆಂಟ್ ಝೋನ್ಗಳಲ್ಲಿ ನೇಮಕ ಮಾಡಲಾಗಿದೆ. ತಮಗೆ ವಹಿಸಿರುವ ಕಂಟೈನ್ಮೆಂಟ್ ಜೋನ್ಗಳಲ್ಲಿ ಹೆಚ್ಚು ಆಸಕ್ತಿ ವಹಿಸಿ ನಿಮ್ಮ ಭಾಗದಲ್ಲಿ ಕೊರೊನಾ ನಿಯಂತ್ರಿಸಲು ಶ್ರಮಿಸಬೇಕು. ಸರ್ಕಾರದ ಸೂಚನೆಗಳನ್ನು ಚಾಚು ತಪ್ಪದೆ ಪಾಲಿಸುವುದರೊಂದಿಗೆ ತಮ್ಮ ಜಾವಾಬ್ದಾರಿ ನಿರ್ವಹಿಸಬೇಕು. ಜೊತೆಗೆ ಹೆಚ್ಚಿನ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಬೇಕು ಎಂದು ತಿಳಿಸಿದರು.
ಮುಂದಿನ ಬಾರಿ ಸಭೆಗೆ ಆಗಮಿಸಿದ ವೇಳೆ ಇನ್ಸಿಡೆಂಟ್ ಕಮಾಂಡರ್ಗಳು ಹೆಚ್ಚಿನ ಸ್ಯಾಂಪಲ್ ಸಂಗ್ರಹಿಸಿರುವ ಬಗ್ಗೆ ವರದಿ ನೀಡಬೇಕು. ಇಲ್ಲದಿದ್ದರೆ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ. ಯಾರೊಬ್ಬರು ಬೇಜಾವಾಬ್ದಾರಿ ತೋರಬೇಡಿ. ಮುಂದಿನ ದಿನಗಳಲ್ಲಿ ಏರುಪೇರಾದರೆ ಪರಿಸ್ಥಿತಿ ಕೈ ಮೀರಿ ಹೋಗಿ ತೊಂದರೆ ಅನುಭವಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಹೆಚ್ಚು ನಿಗಾವಹಿಸಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಹಾರಾಷ್ಟ್ರ, ಗುಜರಾತ್, ತಮಿಳನಾಡು ಹಾಗೂ ಕೇರಳ ರಾಜ್ಯಗಳಿಂದ ನಮ್ಮ ಜಿಲ್ಲೆಗಳಿಗೆ ಬರುವವರ ಬಗ್ಗೆ ಹೆಚ್ಚು ನಿಗಾ ವಹಿಸಬೇಕು. ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಕಡ್ಡಾಯವಾಗಿ ಕ್ವಾರಂಟೈನ್ಲ್ಲಿ ಇರಿಸಬೇಕು. ಹೊರ ರಾಜ್ಯದಿಂದ ಬಂದವರಿಂದ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಲಾಡ್ಜ್ಗಳಲ್ಲಿ ಹಾಗೂ ಇನಸ್ಟಿಟ್ಯೂಷನಲ್ ಕ್ವಾರಂಟೈನ್ ಮಾಡಲಾಗಿರುವವರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ವಿವಿಧ ಇಲಾಖೆಗಳ ಸಹಾಯದೊಂದಿಗೆ ಉತ್ತಮವಾದ ಆಹಾರ ಒದಗಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ವಿಶೇಷವಾಗಿ ಸಣ್ಣ ಮಕ್ಕಳ ಕಾಳಜಿ ವಹಿಸಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಕಂಟೈನ್ಮೆಂಟ್ ಜೋನ್ನಿಂದ ಅನವಶ್ಯಕವಾಗಿ ಹೊರಗಡೆ ಬರುವವರ ಮೇಲೆ ಕೇಸ್ ದಾಖಲು ಮಾಡಲಾಗುತ್ತಿದೆ. ಅಲ್ಲಿನ ಜನರಿಗೆ ಅಗತ್ಯವಿರುವ ಸಾಮಗ್ರಿಗಳನ್ನು ದೊರಕಿಸಿಕೊಡುವ ವ್ಯವಸ್ಥೆ ಮಾಡಲಾಗಿದ್ದು, ಹಣದ ಅವಶ್ಯಕತೆಗಾಗಿ ಅಲ್ಲಿ ಮೊಬೈಲ್ ಎಟಿಎಂ ನೀಡಲಾಗಿದೆ ಎಂದರು.