ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಜೊತೆ ಮರಣ ಪ್ರಮಾಣ ಇಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಯಾವುದೇ ಕಾರಣಕ್ಕೂ ಮೈಮರೆಯುವುದು ಬೇಡ. ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಸವಾಲನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾಗಿದೆ ಎಂದರು.
ಜಿಲ್ಲಾಧಿಕಾರಿಗಳು ಎಲ್ಲ ಅಧಿಕಾರಿಗಳೊಂದಿಗೆ ಒಗ್ಗೂಡಿ ಉತ್ತಮ ಪ್ರಯತ್ನ ಮಾಡಬೇಕು. ಇದೇ ರೀತಿ ರೈತರ ಹಿತದೃಷ್ಟಿಯಿಂದ ಕೃಷಿಗೆ ಪೂರಕವಾಗಿರುವ ಬಿತ್ತನೆ ಬೀಜ, ರಸಗೊಬ್ಬರ ಇನ್ನಿತರೆ ಕೊರತೆಯಾಗದಂತೆ ರೈತರ ಪರವಾಗಿ ನಿಂತು ಎಲ್ಲ ಸವಲತ್ತುಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸಿ, ರೈತ ನೆಮ್ಮದಿಯಿಂದ ಬದುಕಲು ಸಹಕರಿಸುವಂತೆ ಹಾಗೂ ಏನಾದರೂ ಸಮಸ್ಯೆಗಳಿದ್ದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು, ಜಿಲ್ಲಾ ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳುವಂತೆ ತಿಳಿಸಿದರು
ಈ ವೇಳೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 536 ಕೋವಿಡ್ ಪ್ರಕರಣ ದೃಢಪಟ್ಟಿದ್ದು, ಈ ಪೈಕಿ 410 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 20 ಜನರು ಮೃತಪಟ್ಟಿದ್ದು, ಪ್ರಸ್ತುತ 104 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಒಟ್ಟು 126 ಕಂಟೈನ್ಮೆಂಟ್ ಝೋನ್ಗಳನ್ನು ಸ್ಥಾಪಿಸಿದ್ದು ಇದರಲ್ಲಿ 46 ಝೋನ್ಗಳನ್ನು ಡಿನೋಟಿಫೈ ಮಾಡಲಾಗಿದೆ. 86 ವಲಯಗಳ ಪೈಕಿ 20 ಗ್ರಾಮೀಣ ಪ್ರದೇಶಗಳಲ್ಲಿ ಇವೆ ಎಂದರು.

ಇದುವರೆಗೆ ಜಿಲ್ಲೆಯಲ್ಲಿ 32000 ಸ್ವಾಬ್ ಪರೀಕ್ಷೆ ಮಾಡಿಸಲಾಗಿದ್ದು ಜೂನ್ ತಿಂಗಳಲ್ಲಿ 14000 ಮತ್ತು ಜುಲೈ ತಿಂಗಳಲ್ಲಿ 10149 ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಎರಡು ಖಾಸಗಿ ಮತ್ತು ಒಂದು ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್ಗಳಿದ್ದು, 1420 ಕೋವಿಡ್ ಬೆಡ್ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾತನಾಡಿ, ಜಿಲ್ಲೆಯಲ್ಲಿ ಸುವ್ಯವಸ್ಥಿತ ವೈದ್ಯಕೀಯ ಸೌಲಭ್ಯಗಳಿದ್ದರೂ ಸಾವಿನ ಪ್ರಮಾಣ ಹೆಚ್ಚಿದೆ. ಶೇ.3.73 ರಷ್ಟಿದ್ದು ಇದನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು. ಹೆಚ್ಚಿನ ಟೆಸ್ಟ್ನೊಂದಿಗೆ, ಸ್ವಾಬ್ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದರು.
ವಿಡಿಯೋ ಕಾನ್ಪರೆನ್ಸ್ನಲ್ಲಿ ಎಸ್.ಪಿ.ಹನುಮಂತರಾಯ ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪದ್ಮಾ ಬಸವಂತಪ್ಪ, ಉಪವಿಭಾಗಾಧಿಕಾರಿ ಮಮತಾ ಹೂಸಗೌಡರ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಡಿಹೆಚ್ಓ ಡಾ.ರಾಘವೇಂದ್ರಸ್ವಾಮಿ, ಡಿಎಸ್ ಡಾ.ನಾಗರಾಜ್, ಡಿಎಸ್ಓ ಡಾ.ರಾಘವನ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.



