ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಯಕೊಂಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ನಾಡ ಕಚೇರಿ, ವಸತಿ ನಿಲಯ, ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಡ ಕಚೇರಿ ಕಾಮಗಾರಿಗೆ ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟವನ್ನು ಪರಿಶೀಲಿಸಿ, 2020 ರ ಫೆಬ್ರವರಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಾಡಕಚೇರಿಯ ಎ.ಜೆ.ಎಸ್.ಕೆ.ಕೇಂದ್ರ, ದಾಖಲೆ ಶಾಖೆ, ಆಧಾರ ಪ್ರಕ್ರಿಯೆಯನ್ನು ಪರಿಶೀಲಿಸಿ ಸಾರ್ವಜನಿಕರ ಮನವಿಗಳಿಗೆ ಕೂಡಲೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು.
ಮಾಯಕೊಂಡ ಮೊರಾರ್ಜಿ ವಸತಿಯುತ ಶಾಲೆಗೆ ಭೇಟಿ ನೀಡಿ, ವಸತಿನಿಲಯದ ಮೂಲಭೂತ ಸೌಕರ್ಯ ಪರಿಶೀಲನೆ ನಡೆಸಿದರು. ಶಾಲೆಯ 8 ಮತ್ತು 9ನೇ ತರಗತಿ ಮಕ್ಕಳಿಗೆ ಇಂಗ್ಲೀಷ್ ಗ್ರಾಮರ್ ಕುರಿತು ಕೆಲ ಪ್ರಶ್ನೆಗಳನ್ನು ಕೇಳಿ, ಮಕ್ಕಳಿಂದ ಸರಿಯಾಗಿ ಉತ್ತರ ಬಾರದಿದ್ದಾಗ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಗ್ರಾಮರ್ನ್ನು ಬೋರ್ಡ್ ಮೇಲೆ ಹೇಳಿಕೊಟ್ಟರು. ಶಾಲೆಯ ಮುಖ್ಯೋಪಾಧ್ಯಾಯರಿಗೆ ಕೂಡಲೇ ಅವಶ್ಯಕತೆ ಇರುವ ಇಂಗ್ಲಿಷ್ ಗ್ರಾಮರ್ ಪುಸ್ತಕಗಳನ್ನು ಖರೀದಿಸಿ ಮಕ್ಕಳಿಗೆ ಸಮರ್ಪಕವಾಗಿ ಹೇಳಿಕೊಡುವಂತೆ ಶಿಕ್ಷಕರಿಗೆ ತಿಳಿಸಿದರು.

ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತಯಾರಿಸಿದ್ದ ಜಾಮೂನು ಹಾಗೂ ಸಾಂಬರನ್ನು ಸೇವಿಸಿದರು. ಅಡುಗೆ ಕೋಣೆಯನ್ನು ಶುಚಿಯಾಗಿಟ್ಟುಕೊಂಡು ಆಹಾರ ಪದಾರ್ಥ ಸೇರಿದಂತೆ ಸರ್ಕಾರದ ಯಾವ ಸೌಲಭ್ಯಗಳು ದುರುಪಯೋಗ ಆಗದಂತೆ ಮುಖ್ಯ ಶಿಕ್ಷಕರಿಗೆ ಎಚ್ಚರಿಕೆ ನೀಡಿದರು.
ನಂತರ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಸಾಕಷ್ಟು ಗಾಳಿ ಮತ್ತು ಬೆಳಕು ಬರುವ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಆಸ್ಪತ್ರೆಯ ನೆಲದ ಮೇಲೆ ನಿಂತ ನೀರನ್ನು ಗಮನಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕೂಡಲೇ ಸ್ವಚ್ಚಗೊಳಿಸಲು ಕ್ರಮ ವಹಿಸುವಂತೆ ತಿಳಿಸಿದರು.




