ಡಿವಿಜಿ ಸುದ್ದಿ, ದಾವಣಗರೆ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತತ್ತರಿಸಿ ಹೋಗಿದ್ದ ದಾವಣಗೆರೆ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ದಾವಣಗೆರೆಯಲ್ಲಿ ಇನ್ನು ಮೂರ್ನಾಲ್ಕು ದಿನ ಭಾರೀ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಅಕ್ಟೋಬರ್ 26 ರವರೆಗೆ ಭಾರೀ ಮಳೆಯಾಗುವ ಸಂಭವವಿದ್ದು, ರೈತರು ಸೇರಿದಂತೆ ಸಾರ್ವಜನಿಕರೆಲ್ಲರೂ ಎಚ್ಚರದಿಂದರಬೇಕೆಂದು ತಿಳಿಸಲಾಗಿದೆ. ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಮಕ್ಕಳು, ವೃದ್ಧರನ್ನು ಹೊರಗಡೆ ಕಳಿಸುವುದು ಸೂಕ್ತವಲ್ಲ.

ಇನ್ನು ನಗರದ ತಗ್ಗು ಪ್ರದೇಶಗಳಲ್ಲಿ ಹಾಗೂ ನದಿ ಪಾತ್ರದಲ್ಲಿ ವಾಸಿಸುವ ಜನರು ಆದಷ್ಟು ಸುರಕ್ಷಿತ ಸ್ಥಳಗಳಿಗೆ ತೆರಳಿ ಜನ-ಜಾನುವಾರುಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಿದೆ. ಸಂಬಂಧಿಸಿದ ಅಧಿಕಾರಿಗಳು ದಿನದ 24 ತಾಸು ನಿಗಾ ವಹಿಸುತ್ತಿದ್ದು, ನಾಗರೀಕರು ಯಾವುದೇ ತೊಂದರೆಗೆ ಒಳಗಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಸೂಚನೆ ನೀಡಿದ್ದಾರೆ.



