ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾದಂತಹ ಸಂಕಷ್ಟ ಸಮಯದಲ್ಲಿಯೂ ಶಕ್ತಿ ಮೀರಿ ಕಾರ್ಯನಿರ್ವಹಿಸುತ್ತಿರುವ ಸಿಎಂ ಯಡಿಯೂರಪ್ಪ ಪಕ್ಷದ ಪ್ರಶ್ನಾತೀತ ನಾಯಕ. ಮುಂದಿನ ಮೂರು ವರ್ಷವೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
ಕೇಂದ್ರ ಸರ್ಕಾರ ಒಂದು ವರ್ಷ ತುಂಬಿದ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಮೇಶ ಕತ್ತಿ ಹಾಗೂ ಮುರುಗೇಶ ನಿರಾಣಿ ನನ್ನ ಸ್ನೇಹಿತರು. ಬೆಂಗಳೂರಿಗೆ ಹೋದಾಗ ಅವರನ್ನು ಭೇಟಿ ಮಾಡಿ ಪ್ರತ್ಯೇಕ ಸಭೆ ನಡೆಸದಂತೆ ಬುದ್ಧಿ ಹೇಳುತ್ತೇನೆ. ಉಮೇಶ ಕತ್ತಿ ಅವರು ಹಿರಿಯ ಶಾಸಕರಾಗಿದ್ದು, ಮಂತ್ರಿ ಆಗಬೇಕು ಎಂಬ ಆಸೆ ಇದೆ. ಆದರೆ, ಪಕ್ಷದಲ್ಲಿ ಯಾರಿಗೂ ಯಡಿಯೂರಪ್ಪ ಬಗ್ಗೆ ಅಸಮಾಧಾನ ಇಲ್ಲ ಎಂದು ತಿಳಿಸಿದರು.
ಕೊರೊನಾ ತಣ್ಣಗಾದ ಬಳಿಕ ಸಂಪುಟ ವಿಸ್ತರಣೆ ವೇಳೆ ಅವಕಾಶ ಮಾಡಿಕೊಡಬಹುದು. ನಾನು ಯಾರ ಪರವೂ ಇಲ್ಲ, ವಿರೋಧವೂ ಇಲ್ಲ. ಇಂದಿನ ರಾಜಕೀಯ ಬೆಳವಣಿಗೆಯಲ್ಲಿ ನಿರಾಣಿ ಪಾತ್ರವಿಲ್ಲ ಎಂದರು.
ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.



