ಡಿವಿಜಿ ಸುದ್ದಿ, ಹೊನ್ನಾಳಿ: ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಎಂ.ಕಾರಜೋಳ ಹೇಳಿದರು.
ನ್ಯಾಮತಿಯಲ್ಲಿ ಶನಿವಾರ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಾಗೂ ವಿವಿಧ ಸರ್ಕಾರಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಖಾಸಗಿ ಶಾಲೆಯ ಸುಮಾರು 34 ಸಾವಿರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಮಾಡಿಕೊಳ್ಳುತ್ತಿದ್ದಾರೆ. ಇದು ಹೆಮ್ಮೆಯ ವಿಷಯ ಎಂದರು.
ಇಂದಿನ ದಿನಗಳಲ್ಲಿ ಪೋಷಕರು, ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳತ್ತ ಮುಖ ಮಾಡಲು ಮುಖ್ಯ ಕಾರಣ ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆಯಾಗಿದೆ ಎಂದ ಅವರು, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಸಾರ್ವಜನಿಕರು ಬೆಂಬಲಿಸಬೇಕು ಎಂದರು.
ಹೊನ್ನಾಳಿ-ನ್ಯಾಮತಿ ವಿಧಾನಸಭೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಅಭಿವೃದ್ಧಿ ಕೆಲಸಗಳಿಗೆ ರೂ. 80 ಕೋಟಿ ಹಣವನ್ನು ಕೊರೊನಾ ಸಂಕಷ್ಟದಲ್ಲಿಯೂ ತರಲಾಗಿದೆ. ಇದರಿಂದ ಶಾಸಕ ರೇಣುಕಾಚಾರ್ಯ ಅವರ ಸಾಮಾಜಿಕ ಕಳಕಳಿ ದೊಡ್ಡಮಟ್ಟದಲ್ಲಿರುವುದು ತಿಳಿದುಬರುತ್ತದೆ ಎಂದು ಹೇಳಿದರು.
ಸಚಿವರಾದ ಡಾ.ಅಶ್ವಥ್ ನಾರಾಯಣ ಮಾತನಾಡಿ, ದಾವಣಗೆರೆ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆದಿದೆ. ಉನ್ನತ ಶಿಕ್ಷಣ ಸಚಿವನಾಗಿ ಸಿಎಂ ಯಡಿಯೂರಪ್ಪನವರ ನಾಯಕತ್ವದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಸುಧಾರಣೆ ತರಲಾಗಿದೆ. 1968 ಹಾಗೂ 1986 ರಲ್ಲಿ ಈ ಹಿಂದೆ ಶಿಕ್ಷಣ ನೀತಿ ತರಲಾಗಿತ್ತು. ಅದರಂತೆ ಇದೀಗ ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಲಾಗಿದೆ. ಇದರ ಶ್ರೇಯ ಪ್ರಧಾನ ಮಂತ್ರಿ ಅವರಿಗೆ ಸಲ್ಲುತ್ತದೆ. ಈ ಶಿಕ್ಷಣ ನೀತಿಗೆ ಕಾರ್ಯ ರೂಪ ಕೊಟ್ಟವರು ರಾಜ್ಯದ ಡಾ.ಕಸ್ತೂರಿ ರಂಗನ್ ಅವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಕೊಡುಗೆ ನೀಡಲು ರಾಜ್ಯವು ಕಾರಣವಾಗಿದ್ದು, ನಮ್ಮ ಮೇಲೆ ತುಂಬಾ ಜವಾಬ್ದಾರಿ ಇದೆ ಎಂದು ಹೇಳಿದರು.
ಮಾದರಿಯಾಗಿ ಶಿಕ್ಷಣ ನೀತಿ ಅನುಷ್ಠಾನ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಾರ್ಯರೂಪಕ್ಕೆ ತರಲು ನೀತಿ ರೂಪಿಸಿದ್ದು, ಕಾರ್ಯರೂಪಕ್ಕೆ ತರುವ ದೊಡ್ಡ ಜವಾಬ್ದಾರಿ ನಮ್ಮ ರಾಜ್ಯದ ಮೇಲಿದೆ. ದೇಶದ ಎಲ್ಲ ರಾಜ್ಯದವರು ನಮ್ಮ ರಾಜ್ಯದ ಕಡೆ ನೋಡುತ್ತಿದ್ದಾರೆ.
ಐಟಿಐ ಕಾಲೇಜು ಅಭಿವೃದ್ಧಿಗೆ 5 ಸಾವಿರ ಕೋಟಿ: ಐಟಿಐ ಕೋರ್ಸ್ಗೆ 150 ಕಾಲೇಜು ಆಯ್ಕೆ ಮಾಡಿದ್ದು, ಒದೊಂದು ಕಾಲೇಜಿಗೆ 30 ರಿಂದ 33 ಕೋಟಿ ಖರ್ಚು ಮಾಡಲಾಗುತ್ತಿದ್ದು, ಒಟ್ಟು 5 ಸಾವಿರ ಕೋಟಿ ಕೇವಲ ಐಟಿಐ ಕಾಲೇಜು ಅಭಿವೃದ್ಧಿಗೆ ಖರ್ಚು ಮಾಡಲಾಗುತ್ತಿದೆ. ಜೊತೆಗೆ ಡಿಪ್ಲೋಮಾ ಕಾಲೇಜಿಗೆ ಬಹಳಷ್ಟು ವಿದ್ಯಾರ್ಥಿಗಳು ಸೇರಬಯುಸುತ್ತಾರೆ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಸಾಂಕೇತಿಕವಾಗಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಗಿದೆ. ರೂ. 69 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಲೋಕಾರ್ಪಣೆ ಮಾಡಲಾಗಿದೆ ಎಂದರು.
ಅವಳಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಂಸದರು ನಾವು ಬದ್ಧರಾಗಿದ್ದೇವೆ. ವಸತಿಶಾಲೆ, ರಸ್ತೆಗಳು, ಹಾಸ್ಟೆಲ್ಗಳು, ಎಪಿಎಂಸಿ, ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಅನೇಕ ಕಾರ್ಯಕ್ರಮ ಉದ್ಘಾಟನಾ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಹಕಾರ ಸಚಿವರಾದ ಸೋಮಣ್ಣ ಅವರು ಬರಬೇಕಿತ್ತು. ಮೈಸೂರು ದಸರಾ ಹಿನ್ನೆಲೆಯಲ್ಲಿ ಬರಲಾಗಿಲ್ಲ ಎಂದು ತಿಳಿಸಿದರು.
ಸಮಾರಂಭದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್ , ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ವೀರಶೇಖರಪ್ಪ, ಹೊನ್ನಾಳಿ ತಾ.ಪಂ ಅಧ್ಯಕ್ಷ ರಂಗಪ್ಪ, ನ್ಯಾಮತಿ ತಾ.ಪಂ ಅಧ್ಯಕ್ಷ ರವಿಕುಮಾರ್, ಹೊನ್ನಾಳಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸುರೇಶ್, ಸಾಮಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪೇಶಪ್ಪ, ಸುರೇಂದ್ರನಾಯ್ಕ್, ಉಮಾ ರಮೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ, ಜಿ.ಪಂ, ತಾ.ಪಂ ಹಾಗೂ ಎಪಿಎಂಸಿ ಸದಸ್ಯರು ಸೇರಿದಂತೆ ಮತ್ತಿತರರು ಹಾಜರಿದ್ದರು.