ಡಿವಿಜಿ ಸುದ್ದಿ, ದಾವಣಗೆರೆ: ರಂಜಾನ್ ಹಬ್ಬಕ್ಕೆ ಬಟ್ಟೆ ಖರೀದಿಗೆ ಬಂದಿದ್ದ ಯುವತಿಯರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಹಿನ್ನೆಲೆ 5 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಂಜಾನ್ ವೇಳೆ ಅನ್ಯ ಕೋಮಿನ ಬಟ್ಟೆ ಅಂಗಡಿಯಲ್ಲಿ ಬಟ್ಟೆ ಖರೀದಿಸಬಾರದೆಂದು ಮುಸ್ಲಿಂ ಯುವಕರು ಯುವತಿಯರಿಗೆ ಬೆದರಿಕೆ ಹಾಕಿದ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆ ಕೆಟಿಜೆ ನಗರ, ಬಸವನಗರ ಮತ್ತು ಹರಿಹರದಲ್ಲಿ ಒಟ್ಟು 3 ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಬಂಧಿಸಿದಂತೆ ಒಟ್ಟು 5 ಜನರನ್ನು ಬಂಧಿಸಲಾಗಿದೆ ಎಂದು ತಿಳಸಿದರು.
ಮೇ 17 ರಂದು ಮುಸ್ಲಿಂ ಧರ್ಮದ ಮುಖಂಡರೊಂದಿಗೆ ಶಾಂತಿ ಸಭೆ ಸಹ ನಡೆಸಲಾಗಿದ್ದು, ಮುಖಂಡರು ಈ ಬಾರಿ ರಂಜಾನ್ ಆಚರಣೆಯನ್ನು ಸರಳವಾಗಿ ಆಚರಿಸುವಂತೆ ಸಮಾಜದಲ್ಲಿ ಕರೆ ನೀಡಲಾಗಿದೆ. ಆದರೆ ಕೆಲವು ಯುವಕರು ಈ ರೀತಿ ಅನ್ಯ ಕೋಮಿನ ಅಂಗಡಿಯಲ್ಲಿ ಬಟ್ಟೆ ಖರೀದಿಸಬಾರದೆಂಬ ಸಂದೇಶವನ್ನು ಹರಡಿದ್ದಾರೆ.
ಇಂತಹ ಸಂದೇಶಗಳ ವಿರುದ್ದ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಬಗ್ಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಹೀಗೆ ಅನಾವಶ್ಯಕವಾದ ವಿಡಿಯೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುವವರೂ ಸಹ ಅಪರಾಧವಾಗುತ್ತದೆ. ಇದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿ ಡಾ.ರಾಘವನ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಇದ್ದರು.



